ಬೆಂಗಳೂರು: ಕಾವೇರಿ ವಿಷಯವಾಗಿ ಬೆಂಗಳೂರು ಪ್ರಕ್ಷುಬ್ಧವಾಗಿದ್ದು, ಸಚಿವ ಸಂಪುಟ ಸಭೆಯಲ್ಲಿ ಕಾನೂನು ಚೌಕಟ್ಟಿನಲ್ಲಿ ಚರ್ಚಿಸಿ ನಿರ್ಧಾರ ಕೈಗೊಳ್ಳುತ್ತೇವೆ. ಜನರು ಶಾಂತಿ ಕಾಪಾಡಬೇಕು ಎಂದು ಮಂಗಳವಾರ ಮನವಿ ಮಾಡಿದ ಗೃಹ ಸಚಿವ ಜಿ. ಪರಮೇಶ್ವರ ಅವರು, ಸೋಮವಾರ ಗೋಲಿಬಾರ್ನಲ್ಲಿ ಬಲಿಯಾದ ಉಮೇಶ್ ಗೌಡ ಅವರ ಕುಟುಂಬಕ್ಕೆ ₹ 10 ಲಕ್ಷ ನೀಡುವುದಾಗಿ ಘೋಷಿಸಿದರು.
ಮುಖ್ಯಮಂತ್ರಿ ನೇತೃತ್ವದಲ್ಲಿ ನಡೆಯಲಿರುವ ಸಂಪುಟ ಸಭೆಗೆ ತೆರಳುವ ಮುನ್ನ ಸುದ್ದಿಗಾರರ ಜತೆ ಮಾತನಾಡಿದ ಸಚಿವರು, ರಾಜ್ಯದ ಜನರಲ್ಲಿ ಅದರಲ್ಲೂ ಬೆಂಗಳೂರು ಜನರಲ್ಲಿ ಮನವಿ ಮಾಡುತ್ತೇನೆ. ಯಾರೂ ಕಾನೂನು ಕೈಗೆತ್ತಿಕೊಳ್ಳಬೇಡಿ. ಕಾನೂನು ಸುವ್ಯವಸ್ಥೆ ಕಾಪಾಡಲು ಸಹಕರಿಸಿ ಎಂದರು.
ಹಿಂಸಾಕೃತ್ಯದಲ್ಲಿ ತೊಡಗಿರುವ ಹಾಗೂ ಅದಕ್ಕೆ ಪ್ರಚೋದನೆ ನೀಡುವ ದುಷ್ಟಶಕ್ತಿಗಳ ವಿರುದ್ಧ ನಿರ್ಧಾಕ್ಷಿಣ್ಯವಾಗಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಎಚ್ಚರಿಸಿದರು.
ಸೋಮವಾರ ಬೆಂಗಳೂರಿನಲ್ಲಿ ನಡೆದ ಗೋಲಿಬಾರ್ನಲ್ಲಿ ಮೃತಪಟ್ಟ ಕುಣಿಗಲ್ ತಾಲ್ಲೂಕಿನ ಸಿಂಗೋನಹಳ್ಳಿಯ ಉಮೇಶ್ ಗೌಡ ಅವರ ಕುಟುಂಬಕ್ಕೆ ಸರ್ಕಾರದಿಂದ ₹ 10 ಲಕ್ಷ ಪರಿಹಾರ ನೀಡಲಾಗುವುದು ಎಂದು ಪರಮೇಶ್ವರ ಅವರು ಘೋಷಿಸಿದರು.