ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಿಯು ವಿದ್ಯಾರ್ಥಿಗಳಿಗೂ ರುಬೆಲ್ಲಾ, ದಡಾರ ಲಸಿಕೆ

ಅನುಮತಿ ಕೋರಿ ಸರ್ಕಾರಕ್ಕೆ ಪತ್ರ ಬರೆಯಲು ಆರೋಗ್ಯಾಧಿಕಾರಿಗೆ ಜಿಲ್ಲಾಧಿಕಾರಿ ಡಾ.ಲೋಕೇಶ್ ಸೂಚನೆ
Last Updated 22 ಮಾರ್ಚ್ 2017, 6:32 IST
ಅಕ್ಷರ ಗಾತ್ರ

ಶಿವಮೊಗ್ಗ: ದಡಾರ ಮತ್ತು ರುಬೆಲ್ಲಾ ಕಾಯಿಲೆ ಯುವಜನರಿಗೂ ಹರಡುವ ಸಾಧ್ಯತೆ ಇದೆ. ಹೀಗಾಗಿ, ಪಿಯು ವಿದ್ಯಾರ್ಥಿಗಳಿಗೂ ರೋಗ ನಿರೋಧಕ ಲಸಿಕೆ ಹಾಕಲು ಅವಕಾಶ ನೀಡುವಂತೆ ಕೋರಿ ಸರ್ಕಾರಕ್ಕೆ ಪತ್ರ ಬರೆಯಬೇಕು ಎಂದು ಜಿಲ್ಲಾಧಿಕಾರಿ ಎಂ.ಲೋಕೇಶ್ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗೆ ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಡಾ.ಬಿ.ಆರ್‌.ಅಂಬೇಡ್ಕರ್ ಜಯಂತಿ (ಏ.14) ಹಾಗೂ ಬಾಬು ಜಗಜೀವನರಾಂ ಜಯಂತಿ (ಏ.15) ಆಚರಣೆ ಸಂಬಂಧ ಮಂಗಳವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.

ಎರಡೂ ಕಾರ್ಯಕ್ರಮಗಳಲ್ಲಿ ಮೆರವಣಿಗೆ ಹಾಗೂ ಸಭಾ ಕಾರ್ಯಕ್ರಮದಲ್ಲಿ ಎಲ್ಲಾ ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗವಹಿಸಬೇಕು ಎಂದರು.
ದಡಾರ ಮತ್ತು ರುಬೆಲ್ಲಾ ಕಾಯಿಲೆ ಮಕ್ಕಳು ಮತ್ತು ಗರ್ಭಿಣಿಯರಿಗೆ ಹರಡುತ್ತದೆ ಎಂದು ಈಗಾಗಲೇ ಲಸಿಕೆ ಹಾಕಲಾಗಿದೆ. ಯುವಜನರಿಗೂ ಕಾಯಿಲೆ ಹರಡುವ ಸಾಧ್ಯತೆ ಇದೆ. ಹಾಗಾಗಿ, ಪಿಯು ವಿದ್ಯಾರ್ಥಿಗಳಿಗೂ ಲಸಿಕೆ ವಿಸ್ತರಣೆ ಮಾಡುವುದು ಸೂಕ್ತ ಎಂದು ಹೇಳಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಜೇಶ್ ಸುರಗಿಹಳ್ಳಿ ಮಾತನಾಡಿ,  ಫೆ. 7ರಿಂದ ಮಾರ್ಚ್ 19ರವರೆಗೆ ನಡೆದ ಲಸಿಕಾ ಕಾರ್ಯಕ್ರಮ ಸಂಪೂರ್ಣ ಯಶಸ್ವಿಯಾಗಿದೆ. ಜಿಲ್ಲೆಯಲ್ಲಿ ಶೇ 99.9ರಷ್ಟು  ಸಾಧನೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

ಏ.2ರಂದು ಪಲ್ಸ್‌ ಪೋಲಿಯೊ: ಪ್ರಸಕ್ತ ಸಾಲಿನ ಪಲ್ಸ್‌ ಪೋಲಿಯೊ ಲಸಿಕಾ ಅಭಿಯಾನ ಏ.2ರಂದು ಹಮ್ಮಿಕೊಳ್ಳಲಾಗಿದೆ. ಐದು ವರ್ಷದ ಒಳಗಿನ ಎಲ್ಲ ಮಕ್ಕಳಿಗೂ ಲಸಿಕೆ ಹಾಕಲಾಗುವುದು. ಈ ಕಾರ್ಯಕ್ರಮ ಯಶಸ್ವಿಗೊಳಿಸಲು ಅಧಿಕಾರಿಗಳು ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು.

ಕಳೆದ ವರ್ಷ 1,56,630 ಮಕ್ಕಳಿಗೆ ಲಸಿಕೆ ಹಾಕಲಾಗಿತ್ತು. ಈ ಬಾರಿಯೂ ನಿರ್ದಿಷ್ಟ ಗುರಿ ಸಾಧಿಸಲು ಅಗತ್ಯವಿರುವ ಎಲ್ಲ ಪೂರ್ವ ಸಿದ್ಧತೆ ಮಾಡಿಕೊಳ್ಳಬೇಕು. ಜನ ಜಾಗೃತಿ ಮೂಡಿಸಲು ವ್ಯಾಪಕ ಪ್ರಚಾರ ಕೈಗೊಳ್ಳಬೇಕು ಎಂದು ಸಲಹೆ ನೀಡಿದರು.

‘ಪ್ರಸ್ತುತ ಜಿಲ್ಲೆಯಲ್ಲಿ 867 ಲಸಿಕಾ ಕೇಂದ್ರ ಸ್ಥಾಪಿಸಲಾಗುತ್ತಿದೆ. 1,734 ತಂಡ ರಚಿಸಲಾಗಿದೆ. 3,640 ವ್ಯಾಕ್ಸಿನೇಟರ್‍, 183 ಮೇಲ್ವಿಚಾರಕರು, 41 ಟ್ರಾನ್ಸಿಸ್ಟ್ ತಂಡ, 29 ಸಂಚಾರಿ ತಂಡ ನೇಮಿಸಲಾಗಿದೆ. 600 ಆರೋಗ್ಯ ಸಿಬ್ಬಂದಿ, 2,402 ಅಂಗನವಾಡಿ ಕಾರ್ಯಕರ್ತೆಯರು, 1,141 ಆಶಾ ಕಾರ್ಯಕರ್ತರೂ ಸೇರಿ ಒಟ್ಟು 4,143 ಮಂದಿ ಭಾಗವಹಿಸಲಿದ್ದಾರೆ’ ಎಂದು  ಜಿಲ್ಲಾ ಆರೋಗ್ಯಾಧಿಕಾರಿ ಸಭೆಗೆ ಮಾಹಿತಿ ನೀಡಿದರು.

ಅಧಿಕಾರಿಗಳ ಹಾಜರಾತಿ ಕಡ್ಡಾಯ: ಡಾ.ಬಿ.ಆರ್‌.ಅಂಬೇಡ್ಕರ್ ಜಯಂತಿ (ಏಪ್ರಿಲ್ 14) ಹಾಗೂ ಬಾಬು ಜಗಜೀವನರಾಂ ಜಯಂತಿ (ಏಪ್ರಿಲ್ 15) ಕಾರ್ಯಕ್ರಮದಲ್ಲಿ ಎಲ್ಲಾ ಅಧಿಕಾರಿಗಳು ಕಡ್ಡಾಯವಾಗಿ ಹಾಜರಿರಬೇಕು ಎಂದು ಜಿಲ್ಲಾಧಿಕಾರಿ ತಾಕೀತು ಮಾಡಿದರು.

ಏಪ್ರಿಲ್ 14ರಂದು ಮಹಾನಗರ ಪಾಲಿಕೆ ಆವರಣದಲ್ಲಿರುವ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ, ಅಂಬೇಡ್ಕರ್ ಜಯಂತಿ ಮೆರ
ವಣಿಗೆಗೆ ಚಾಲನೆ ನೀಡಲಾಗುವುದು.  ಶಿವಪ್ಪನಾಯಕ ವೃತ್ತ, ಅಮೀರ್ ಅಹಮದ್ ವೃತ್ತ, ನೆಹರೂ ರಸ್ತೆ ಮಾರ್ಗವಾಗಿ ಗೋಪಿ ವೃತ್ತದ ಮೂಲಕ ಮೆರವಣಿಗೆಯು ಡಾ.ಬಿ.ಆರ್. ಅಂಬೇಡ್ಕರ್ ಭವನ ತಲುಪಲಿದೆ ಎಂದು ಮಾಹಿತಿ ನೀಡಿದರು.

ಎರಡೂ ಕಾರ್ಯಕ್ರಮಗಳನ್ನು ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲೇ ಆಚರಿಸಲಾಗುವುದು. ಜಿಲ್ಲಾ ಉಸ್ತುವಾರಿ ಸಚಿವ ಕಾಗೋಡು ತಿಮ್ಮಪ್ಪ ಕಾರ್ಯ
ಕ್ರಮ ಉದ್ಘಾಟಿಸಲಿದ್ದಾರೆ. ಜಿಲ್ಲೆಯ ಜನಪ್ರತಿನಿಧಿಗಳು ಕಾರ್ಯಕ್ರಮದಲ್ಲಿ ಭಾಗವಹಿಸುವರು ಎಂದರು.

ಕಾರ್ಯಕ್ರಮ ಅರ್ಥಪೂರ್ಣವಾಗಿ ಆಚರಿಸಲಾಗುವುದು. ಕಾರ್ಯಕ್ರಮದಲ್ಲಿ ವಿಷಯ ತಜ್ಞರಿಂದ ವಿಶೇಷ ಉಪನ್ಯಾಸ ಏರ್ಪಡಿಸಲಾಗುವುದು ಎಂದು ತಿಳಿಸಿದರು.  ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಕೆ.ಎಚ್.ಶಿವಕುಮಾರ್ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT