ಚಿಕ್ಕಬಳ್ಳಾಪುರ: ಬಯಲು ಸೀಮೆ ಭಾಗಕ್ಕೆ ಶಾಶ್ವತ ನೀರಾವರಿ ಯೋಜನೆ ಅನುಷ್ಠಾನಗೊಳಿಸುವಲ್ಲಿ ರಾಜ್ಯ ಸರ್ಕಾರ ನಿರ್ಲಕ್ಷ್ಯ ಧೋರಣೆ ತಳೆದಿದೆ ಎಂದು ಆರೋಪಿಸಿ ರಾಜ್ಯ ರೈತಸಂಘ ಹಾಗೂ ಹಸಿರು ಸೇನೆ ವತಿಯಿಂದ ಗುರುವಾರ ವಿಧಾನಸೌಧ ಮುತ್ತಿಗೆ ಹಾಕಲು ನಗರದಿಂದ ಬೃಹತ್ ಬೈಕ್ ರ್ಯಾಲಿ ತೆರಳಿತು.
ಬಾಗೇಪಲ್ಲಿಯಿಂದ ಆರಂಭಗೊಂಡ ಬೈಕ್ ರ್ಯಾಲಿಗೆ ನಗರ ಹೊರವಲಯದ ಚಿತ್ರಾವತಿ ಬಳಿ ಜಿಲ್ಲೆಯ ಉಳಿದೆಲ್ಲ ತಾಲ್ಲೂಕುಗಳಿಂದ ರೈತಸಂಘದ ಪದಾಧಿಕಾರಿಗಳು ಬಂದು ಸೇರಿಕೊಂಡರು. ನೂರಾರು ಸಂಖ್ಯೆಯಲ್ಲಿದ್ದ ಬೈಕ್ ಸವಾರರು ಸರ್ಕಾರ ವಿರುದ್ಧ ಘೋಷಣೆ ಕೂಗುತ್ತ ಬೆಂಗಳೂರಿನತ್ತ ಪ್ರಯಾಣ ಬೆಳೆಸಿದರು.
ಬೈಕ್ ರ್ಯಾಲಿಯಿಂದ ಬೆಂಗಳೂರಿನ ಸಂಚಾರ ವ್ಯವಸ್ಥೆಗೆ ತೊಂದರೆಯಾಗುತ್ತದೆ ಎಂದು ಪೊಲೀಸರು ರ್ಯಾಲಿಗೆ ಬೆಂಗಳೂರು ಪ್ರವೇಶಕ್ಕೆ ಅನುಮತಿ ನೀಡಿಲ್ಲ. ಬದಲು ದೇವನಹಳ್ಳಿಯ ರಾಣಿ ವೃತ್ತದ ವರೆಗೆ ರ್ಯಾಲಿ ನಡೆಸಲು ಸಮ್ಮತಿಸಿದ್ದಾರೆ ಎಂದು ತಿಳಿದು ಬಂದಿದೆ.
ದೇವನಹಳ್ಳಿಗೆ ಬೆಂಗಳೂರು ಗ್ರಾಮಾಂತರ, ದೊಡ್ಡಬಳ್ಳಾಪುರ, ಕೋಲಾರದಿಂದ ಬೈಕ್ ರ್ಯಾಲಿಗಳು ಬಂದು ಸೇರಲಿವೆ. ಬಳಿಕ ರಾಣಿ ವೃತ್ತದಲ್ಲಿ ಬಹಿರಂಗ ಸಭೆ ನಡೆಸಿ ಸರ್ಕಾರ ಮನವಿ ಸಲ್ಲಿಸಲಾಗುತ್ತದೆ ಎಂದು ರೈತಸಂಘದ ಮುಖಂಡರು ತಿಳಿಸಿದರು.
ಬೈಕ್ ರ್ಯಾಲಿ ಪ್ರಯುಕ್ತ ಅಹಿತಕರ ಘಟನೆಗಳು ನಡೆಯದಂತೆ ಭಾರಿ ಪೊಲೀಸ್ ಬದೋಬಸ್ತ್ ವ್ಯವಸ್ಥೆ ಮಾಡಲಾಗಿತ್ತು.