ಚಿಕ್ಕಬಳ್ಳಾಪುರ: ‘ಜಾಗತಿಕ ಮಟ್ಟದಲ್ಲಿ ಪರಿಸರ ಸಂರಕ್ಷಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ’ ಎಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶ ಎ.ಎಸ್.ಬೆಳ್ಳುಂಕೆ ಅಭಿಪ್ರಾಯಪಟ್ಟರು.
ನಗರದ ಸೂಲಾಲಪ್ಪನ ದಿಣ್ಣೆಯ ಸಸ್ಯೋದ್ಯಾನದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ, ಜಿಲ್ಲಾಡಳಿತ ರಾಜ್ಯ ಮಾಲಿನ್ಯ ನಿಯಂತ್ರಂಣ ಮಂಡಳಿ ಮತ್ತು ಅರಣ್ಯ ಇಲಾಖೆ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ‘ವಿಶ್ವ ಪರಿಸರ ದಿನಾಚರಣೆ’ ಗಿಡ ನೆಡುವ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು, ‘ಮಕ್ಕಳ ಭವಿಷ್ಯಕ್ಕಾಗಿ ಪರಿಸರ ಮಾಲಿನ್ಯವನ್ನು ನಿಯಂತ್ರಿಸಬೇಕು’ ಎಂದು ಹೇಳಿದರು.
‘ಮಾನವನ ದುರಾಸೆಯಿಂದ ಇತ್ತೀಚಿನ ದಿನಗಳಲ್ಲಿ ಕೆರೆ, ಕುಂಟೆ, ಕಾಲುವೆಗಳು ಮಾಯವಾಗುತ್ತಿವೆ. ಪರಿಸರ ಉಳಿಸದಿದ್ದರೆ ಮುಂದಿನ ದಿನಗಳಲ್ಲಿ ಅಪಾಯಕಾರಿ ಪರಿಣಾಮ ಎದುರಿಸ ಬೇಕಾಗುತ್ತದೆ. ಆದ್ದರಿಂದ ಮಕ್ಕಳಲ್ಲಿ ಜಾಗೃತಿ ಮೂಡಿಸಬೇಕು’ ಎಂದರು.
ಜಿಲ್ಲಾಧಿಕಾರಿ ದೀಪ್ತಿ ಆದಿತ್ಯ ಕಾನಡೆ ಮಾತನಾಡಿ, ‘ಹೆಚ್ಚು ಗಿಡ ನೆಡುವ ಮೂಲಕ ಪರಿಸರ ಸಮತೋಲನ ಕಾಪಾಡಬೇಕು. ಹಾಗೂ ಪ್ಲಾಸ್ಟಿಕ್ ಬಳಕೆ ಬೇಡ’ ಎಂದು ಹೇಳಿದರು.
‘ಬಯಲು ಸೀಮೆ ಚಿಕ್ಕಬಳ್ಳಾಪುರದಲ್ಲಿ ಸುಮಾರು 1,500 ಅಡಿಗಳಷ್ಟು ಆಳ ಅಂತರ್ಜಲ ಮಟ್ಟ ಕುಸಿತ ಕಂಡಿದ್ದು, ಮುಂದಿನ ದಿನಗಳಲ್ಲಿ ನೀರಿಗಾಗಿ ಇನ್ನಷ್ಟು ಬರ ಬರುವ ಪರಿಸ್ಥಿತಿ ಎದುರಾಗಿದೆ. ಮುಂದಿನ ಪೀಳಿಗೆಗೆ ಪರಿಸರ ಸಂರಕ್ಷಿಸುವಲ್ಲಿ ಹೆಚ್ಚು ಸಮಯ ಮೀಸಲಿಡ ಬೇಕಾಗಿದೆ’ ಎಂದು ತಿಳಿಸಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜೆ.ಮಂಜುನಾಥ್, ‘ಪರಿಸರ ಮಾಲಿನ್ಯ ತಡೆಗಟ್ಟುವಲ್ಲಿ ಜನ ಜಾಗೃತಿ ಮೂಡಿಸಬೇಕು’ ಎಂದು ಹೇಳಿದರು.
ಪರಿಸರ ಅಧಿಕಾರಿ ಎಸ್.ಮಧುಸೂದನ್ ಮಾತನಾಡಿ, ‘ಮನುಷ್ಯನಾದವನೂ ಯಾವಾಗಲು ಪರಿಸರವನ್ನು ಆರ್ಥಿಕವಾಗಿ ನೋಡಬಾರದು. ಅವನ ನಡೆಯು ಎಂದಿಗೂ ಪರಿಸರ ಉಳಿಸುವಲ್ಲಿರಬೇಕು’ ಎಂದು ಹೇಳಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಾರ್ತಿಕ್ ರೆಡ್ಡಿ, ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರಾದ ಎಸ್.ಶೋಭಾ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರು ಅಶ್ವತ್ಥರೆಡ್ಡಿ, ನಗರ ಸಭೆ ಆಯುಕ್ತ ಉಮಾಕಾಂತ್, ವಕೀಲರ ಸಂಘದ ಅಧ್ಯಕ್ಷ ಪ್ರಕಾಶ್, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ ಅಧ್ಯಕ್ಷ ಕೆ.ಎಂ.ರವಿಕುಮಾರ್, ಅರಣ್ಯ ಇಲಾಖೆ ಅಧಿಕಾರಿ ಡಿ.ಮಂಜುನಾಥ್ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.