ಬೆಂಗಳೂರು: ಜನತಾದಳ (ಜಾತ್ಯತೀತ) ನಗರ ಘಟಕದ ವತಿಯಿಂದ ಆಯೋಜಿಸಿದ್ದ ‘ಮನೆ ಮನೆಗೆ ಕುಮಾರಣ್ಣ’ ಪಾದಯಾತ್ರೆಗೆ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರು ಬೊಮ್ಮನಹಳ್ಳಿಯಲ್ಲಿ ಮಂಗಳವಾರ ಚಾಲನೆ ನೀಡಿದರು.
ಜೆಡಿಎಸ್ ನಗರ ಘಟಕದ ಅಧ್ಯಕ್ಷ ಆರ್.ಪ್ರಕಾಶ್, ‘ಜನರು ಇದ್ದಲ್ಲಿಗೆ ತೆರಳಿ ಅವರ ಸಮಸ್ಯೆಗಳಿಗೆ ಸ್ಪಂದಿಸುವುದು, ಪಕ್ಷವನ್ನು ಸಂಘಟಿಸುವುದು ನಮ್ಮ ಮುಖ್ಯ ಉದ್ದೇಶ. ಕುಮಾರಸ್ವಾಮಿ ಹಾಗೂ ಎಚ್.ಡಿ.ದೇವೇಗೌಡರು ಅಧಿಕಾರದಲ್ಲಿದ್ದಾಗ ನಗರಕ್ಕೆ ಅವರು ಕೊಟ್ಟ ಕೊಡುಗೆ ಬಗ್ಗೆ ತಿಳಿಸಲಾಗುತ್ತದೆ’ ಎಂದು ತಿಳಿಸಿದರು.
‘ಮೊದಲ ಹಂತವಾಗಿ, ಪ್ರತಿದಿನ ಎರಡು ವಿಧಾನಸಭಾ ಕ್ಷೇತ್ರದಂತೆ ನಗರದ 28 ವಿಧಾನಸಭಾ ಕ್ಷೇತ್ರಗಳ 198 ಬಿಬಿಎಂಪಿ ವಾರ್ಡ್ಗಳಲ್ಲಿ ಪಾದಯಾತ್ರೆ ನಡೆಯಲಿದೆ. ಜೂನ್ 15ರಂದು ರಾಜರಾಜೇಶ್ವರಿ ನಗರದಲ್ಲಿ ಅಂತ್ಯಗೊಳ್ಳಲಿದೆ’ ಎಂದು ಅವರು ಹೇಳಿದರು.