ನವದೆಹಲಿ: ‘ಜುಲೈ 24ರಂದು ರಾಷ್ಟ್ರಪತಿಯಾಗಿ ಪ್ರಣವ್ ಮುಖರ್ಜಿ ಅವರ ಅವಧಿ ಕೊನೆಯಾಗಲಿದೆ. ರಾಷ್ಟ್ರಪತಿ ಸ್ಥಾನಕ್ಕೆ ನಾಮಪತ್ರ ಸಲ್ಲಿಸಲು ಜೂನ್ 28 ಕೊನೆಯ ದಿನ’ ಎಂದು ಮುಖ್ಯ ಚುನಾವಣಾ ಆಯುಕ್ತ ನಸೀಂ ಜೈದಿ ತಿಳಿಸಿದ್ದಾರೆ.
ನವದೆಹಲಿಯಲ್ಲಿ ಬುಧವಾರ ಪತ್ರಿಕಾಗೋಷ್ಠಿ ನಡೆಸಿದ ಜೈದಿ, ‘ನಾಮಪತ್ರ ಹಿಂಪಡೆಯಲು ಜುಲೈ 1 ಕೊನೇ ದಿನ. ಅಗತ್ಯಬಿದ್ದರೆ ಜುಲೈ 17ರಂದು ಚುನಾವಣೆ ನಡೆಸಲಾಗುವುದು. ಚುನಾವಣೆ ನಡೆದರೆ ಜುಲೈ 20ರಂದು ಮತ ಎಣಿಕೆ ಕಾರ್ಯ ನಡೆಯಲಿದೆ’ ಎಂದು ಹೇಳಿದ್ದಾರೆ.
ಒಬ್ಬರಿಗಿಂತ ಹೆಚ್ಚು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದರೆ ಮಾತ್ರ ಚುನಾವಣೆ ನಡೆಸಬೇಕಾಗುತ್ತದೆ. ಒಬ್ಬರೇ ನಾಮಪತ್ರ ಸಲ್ಲಿಸಿದರೆ ಅವರೇ ಅವಿರೋಧವಾಗಿ ರಾಷ್ಟ್ರಪತಿ ಸ್ಥಾನಕ್ಕೆ ಆಯ್ಕೆಯಾಗುತ್ತಾರೆ.