ಬೆಂಗಳೂರು: ಕಾಂಗ್ರೆಸ್ ಮುಖವಾಣಿ ‘ನ್ಯಾಷನಲ್ ಹೆರಾಲ್ಡ್’ ಪತ್ರಿಕೆಗೆ ಮರುಚಾಲನೆ ನೀಡಲು ಇದೇ 12ರಂದು ನಗರಕ್ಕೆ ಬರಲಿರುವ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ವಿಧಾನಸಭಾ ಚುನಾವಣೆ ಸಿದ್ಧತೆ ಕುರಿತು ಪಕ್ಷದ ರಾಜ್ಯ ನಾಯಕರೊಂದಿಗೆ ಮಹತ್ವದ ಚರ್ಚೆ ನಡೆಸಲಿದ್ದಾರೆ.
ಚುನಾವಣಾ ರಣತಂತ್ರ, ಟಿಕೆಟ್ ಹಂಚಿಕೆ, ಪ್ರಚಾರ, ಉಳಿದ ಅಲ್ಪ ಸಮಯದಲ್ಲಿ ಸರ್ಕಾರದ ಯೋಜನೆಗಳನ್ನು ಜನರಿಗೆ ಪರಿಣಾಮಕಾರಿಯಾಗಿ ತಲುಪಿಸುವ ವಿಚಾರದ ಬಗ್ಗೆ ರಾಹುಲ್ ಸಮಾಲೋಚಿಸಲಿದ್ದಾರೆ ಎಂದು ಕೆಪಿಸಿಸಿ ಮೂಲಗಳು ತಿಳಿಸಿವೆ.
ಕೆಪಿಸಿಸಿ ಆಧ್ಯಕ್ಷ ಡಾ. ಜಿ.ಪರಮೇಶ್ವರ್, ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್, ಪ್ರಚಾರ ಸಮಿತಿಯ ಉಸ್ತುವಾರಿ ಹೊತ್ತಿರುವ ಡಿ.ಕೆ.ಶಿವಕುಮಾರ್, ಸಚಿವರು ಹಾಗೂ ಕೆಪಿಸಿಸಿ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ.
ಸೋಮವಾರ ಮಧ್ಯಾಹ್ನ ಉಪ ರಾಷ್ಟ್ರಪತಿ ಹಮೀದ್ ಅನ್ಸಾರಿ, ಅಂಬೇಡ್ಕರ್ ಭವನದಲ್ಲಿ ಪತ್ರಿಕೆ ಬಿಡುಗಡೆ ಮಾಡಲಿದ್ದಾರೆ. ಮೂರು ಗಂಟೆಗೆ ರಾಹುಲ್ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.