ಶಿವಮೊಗ್ಗ: ಕಿಮ್ಸ್ ಸೇರಿದಂತೆ ಶಿವಮೊಗ್ಗ, ರಾಯಚೂರು, ಬೀದರ್, ಬೆಳಗಾವಿ, ಹಾಸನ, ಮಂಡ್ಯ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ತಲಾ 50 ಎಂಬಿಬಿಎಸ್ ಸೀಟು ಹೆಚ್ಚಿಸಲಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ್ ಪಾಟೀಲ ತಿಳಿಸಿದರು.
ಇಲ್ಲಿನ ಮೆಗ್ಗಾನ್ ಆಸ್ಪತ್ರೆಗೆ ಶನಿವಾರ ಭೇಟಿ ನೀಡಿದ ಅವರು ಸುದ್ದಿಗಾರರಿಗೆ ಈ ವಿಷಯ ತಿಳಿಸಿದರು.
ಮುಂದಿನ ಶೈಕ್ಷಣಿಕ ವರ್ಷದಿಂದ ಹೊಸದಾಗಿ 7 ಸರ್ಕಾರಿ ವೈದ್ಯಕೀಯ ಕಾಲೇಜು ಆರಂಭಿಸಲಾಗುವುದು ಎಂದು ಹೇಳಿದರು.
ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿದ್ದ ಅಮೀರ್ ಸಾಬ್ ಅವರನ್ನು ಪತ್ನಿ ನೆಲದ ಮೇಲೆ ಎಳೆದುಕೊಂಡು ಹೋಗಿದ್ದ ಪ್ರಕರಣ ವಿಷಾದನೀಯ. ಭವಿಷ್ಯದಲ್ಲಿ ಇಂತಹ ಪ್ರಕರಣಗಳು ಮರುಕಳಿಸದಂತೆ ನಿಗಾವಹಿಸಲು ಎಲ್ಲ ಬೋಧನಾ ಆಸ್ಪತ್ರೆಗಳಿಗೆ ತಾಕೀತು ಮಾಡಲಾಗಿದೆ ಎಂದು ಅವರು ಹೇಳಿದರು.
ಹಿಂದಿನ ಸರ್ಕಾರ ಖಾಸಗಿ ಸಹಭಾಗಿತ್ವದಲ್ಲಿ ಆಧುನಿಕ ಸ್ಕ್ಯಾನಿಂಗ್ ಯಂತ್ರಗಳ ಖರೀದಿಗೆ ಅವಕಾಶ ನೀಡಿತ್ತು. ಹಾಗೆ ಮಾಡಿದರೆ ಬಡವರಿಗೆ ಉಚಿತ ಸೌಲಭ್ಯ ನೀಡಲು ಸಾಧ್ಯವಿಲ್ಲ. ಸರ್ಕಾರವೇ ಯಂತ್ರ ಖರೀದಿಗೆ ಅನುದಾನ ನೀಡಲಿದೆ ಎಂದು ಭರವಸೆ ನೀಡಿದರು. ಜಿಲ್ಲಾ ಉಸ್ತುವಾರಿ ಸಚಿವ ಕಾಗೋಡು ತಿಮ್ಮಪ್ಪ ಅವರೂ ಈ ಸಂದರ್ಭದಲ್ಲಿ ಇದ್ದರು.