ನವದೆಹಲಿ: ಎಲೆಕ್ಟ್ರಾನಿಕ್ ಮತಯಂತ್ರ (ಇವಿಎಂ) ಹಾಗೂ ಅದರ ವಿಶ್ವಾಸಾರ್ಹತೆಯ ಬಗ್ಗೆ ಆಧಾರರಹಿತ ಆರೋಪಗಳನ್ನು ಮಾಡುವ ಜನರು ಹಾಗೂ ಸಂಸ್ಥೆಗಳಿಗೆ ನೋಟಿಸ್ ಜಾರಿ ಮಾಡುವ ಮತ್ತು ಅಂತಹವರನ್ನು ಕರೆದು ವಾಗ್ದಂಡನೆಗೆ ಗುರಿಪಡಿಸುವ ಅಧಿಕಾರವನ್ನು ತನಗೆ ನೀಡಬೇಕು ಎಂದು ಭಾರತೀಯ ಚುನಾವಣಾ ಆಯೋಗವು ಕೇಂದ್ರ ಕಾನೂನು ಸಚಿವಾಲಯಕ್ಕೆ ಮನವಿ ಮಾಡಿದೆ.
ಹೆಚ್ಚಿನ ಅಧಿಕಾರ ನೀಡಿದರೆ ಸಾಂವಿಧಾನಿಕ ಸಂಸ್ಥೆಯ ವಿರುದ್ಧ ತಲೆಬುಡವಿಲ್ಲದ ಆರೋಪಗಳು ಬರುವುದನ್ನು ತಡೆಯಲು ಸಾಧ್ಯವಾಗುತ್ತದೆ ಮತ್ತು ಸಂಸ್ಥೆಯ ವಿಶ್ವಾಸಾರ್ಹತೆ ಎತ್ತಿಹಿಡಿಯುವ ಪ್ರಯತ್ನಗಳಿಗೆ ಇನ್ನಷ್ಟು ಉತ್ತೇಜನ ಸಿಗುತ್ತದೆ ಎಂದು ಸಚಿವಾಲಯಕ್ಕೆ ಬರೆದ ಪತ್ರದಲ್ಲಿ ಆಯೋಗ ಹೇಳಿದೆ.
ಸದ್ಯ, ಆಯೋಗದ ಮೇಲೆ ಆರೋಪ ಮಾಡಿದವರ ವಿರುದ್ಧ ಪೊಲೀಸರಿಗೆ ದೂರು ನೀಡುವ ಅಧಿಕಾರ ಮಾತ್ರ ಅದಕ್ಕಿದೆ.
ಪರಿಶೀಲನೆ: ಆಯೋಗವು ಕಳುಹಿಸಿರುವ ಪತ್ರವನ್ನು ಪರಿಶೀಲಿಸಲಾಗುತ್ತಿದೆ ಎಂದು ಸಚಿವಾಲಯ ಹೇಳಿದೆ.
ಇತ್ತೀಚೆಗೆ ನಡೆದ ಐದು ರಾಜ್ಯಗಳ ವಿಧಾನಸಭಾ ಚುನಾವಣೆಯ ಫಲಿತಾಂಶದ ಬಳಿಕ ಎಎಪಿ, ಬಿಎಸ್ಪಿ, ಎಸ್ಪಿ ಸೇರಿದಂತೆ ಹಲವು ಪಕ್ಷಗಳು ಚುನಾವಣಾ ಆಯೋಗದ ವಿರುದ್ಧ ಆರೋಪ ಮಾಡಿದ್ದಲ್ಲದೇ ಇವಿಎಂಗಳ ವಿಶ್ವಾಸಾರ್ಹತೆ ಪ್ರಶ್ನಿಸಿದ್ದವು.