ನವದೆಹಲಿ: ಜುಲೈ 17ರಂದು ನಡೆಯಲಿರುವ ರಾಷ್ಟ್ರಪತಿ ಚುನಾವಣೆಗೆ ಒಮ್ಮತದ ಅಭ್ಯರ್ಥಿ ಆಯ್ಕೆ ಮಾಡಲು ಹಿರಿಯ ಸಚಿವರ ಸಮಿತಿಯೊಂದನ್ನು ಬಿಜೆಪಿ ಅಧ್ಯಕ್ಷ ಅಮಿತ್ ಷಾ ರಚಿಸಿದ್ದಾರೆ. ಸಮಿತಿಯಲ್ಲಿ ರಾಜನಾಥ ಸಿಂಗ್, ಅರುಣ್ ಜೇಟ್ಲಿ, ವೆಂಕಯ್ಯ ನಾಯ್ಡು ಇದ್ದಾರೆ.
ಬಿಜೆಪಿಯ ಮಿತ್ರ ಪಕ್ಷಗಳು ಹಾಗೂ ವಿರೋಧ ಪಕ್ಷಗಳ ನಾಯಕರ ಜತೆ ಸಮಾಲೋಚನೆ ನಡೆಸಿ, ಒಮ್ಮತ ಮೂಡಿಸಲು ಸಮಿತಿ ಯತ್ನಿಸಲಿದೆ ಎಂದು ಪ್ರಕಟಣೆ ತಿಳಿಸಿದೆ.
ಪ್ರಮುಖ ಪ್ರತಿಪಕ್ಷಗಳು ರಾಷ್ಟ್ರಪತಿ ಅಭ್ಯರ್ಥಿ ಆಯ್ಕೆ ಬಗ್ಗೆ ತಮ್ಮೊಳಗೇ ಸಮಾಲೋಚನೆ ನಡೆಸುತ್ತಿವೆ. ಒಂದು ವೇಳೆ ಹಿಂದುತ್ವದ ಪ್ರಬಲ ಪ್ರತಿಪಾದಕ ವ್ಯಕ್ತಿಯನ್ನು ಬಿಜೆಪಿ ನೇತೃತ್ವದ ಎನ್ಡಿಎ ಆರಿಸಿದಲ್ಲಿ, ತಮ್ಮ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಅವು ಚಿಂತನೆ ನಡೆಸಿವೆ.
ಬಿಜೆಪಿ ಸಮಿತಿಯು ಒಮ್ಮತದ ಅಭ್ಯರ್ಥಿ ಆಯ್ಕೆಗೆ ವಿವಿಧ ರಾಜಕೀಯ ಪಕ್ಷಗಳ ಜತೆ ಸಮಾಲೋಚನೆ ನಡೆಸಲು ಮುಂದಾಗಲಿದೆ. ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್ ಷಾ ಅವರು ಅಂತಿಮ ತೀರ್ಮಾನ ತೆಗೆದುಕೊಳ್ಳಲಿದ್ದಾರೆ.