ನವದೆಹಲಿ: ರಾಷ್ಟ್ರಪತಿ ಚುನಾವಣೆ ಅಭ್ಯರ್ಥಿ ಆಯ್ಕೆಯ ಕಸರತ್ತು ಮುಂದುವರಿದಿರುವಾಗಲೇ ಆಡಳಿತಾರೂಢ ಎನ್ಡಿಎ ಅಂಗಳದಿಂದ ದಿನಕ್ಕೊಂದು ಹೊಸ ಸುದ್ದಿ ಹೊರಬೀಳುತ್ತಿದೆ.
ಬಿಜೆಪಿ ಅಭ್ಯರ್ಥಿ ಯಾರು ಎಂಬ ವಿಷಯ ಇನ್ನೂ ಜೀವಂತವಾಗಿರುವಾಗಲೇ ವಿದೇಶಾಂಗ ವ್ಯವಹಾರಗಳ ಸಚಿವೆ ಸುಷ್ಮಾ ಸ್ವರಾಜ್ ಅವರ ಹೆಸರು ಮುಂಚೂಣಿಗೆ ಬಂದಿದೆ.
ಬಿಜೆಪಿ ಇದುವರೆಗೂ ಯಾರ ಹೆಸರನ್ನೂ ಅಧಿಕೃತವಾಗಿ ಘೋಷಣೆ ಮಾಡಿಲ್ಲವಾದರೂ ಸುಷ್ಮಾ ಅವರನ್ನು ಎನ್ಡಿಎ ಅಭ್ಯರ್ಥಿಯಾಗಿ ಕಣಕ್ಕಿಳಿಸಲು ನಿರ್ಧರಿಸಿದೆ ಎಂಬ ಸುದ್ದಿ ದಟ್ಟವಾಗಿ ಹರಡಿದೆ.ಆದರೆ, ಬಿಜೆಪಿ ಮಾತ್ರ ಈ ಬಗ್ಗೆ ಎಲ್ಲಿಯೂ ಸುಳಿವು ಬಿಟ್ಟುಕೊಡದೆ ರಹಸ್ಯ ಕಾಪಾಡಿಕೊಂಡು ಬಂದ ಕಾರಣ ಕುತೂಹಲ ಮೂಡಿಸಿದೆ.
ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರ್ಎಸ್ಎಸ್) ಒಂದು ಗುಂಪು ಸುಷ್ಮಾ ಸ್ವರಾಜ್ ಅವರನ್ನು ಕಣಕ್ಕಿಳಿಸುವುದಾದರೆ ತನ್ನ ಅಭ್ಯಂತರ ಇಲ್ಲ ಎಂದು ಹೇಳಿರುವುದು ಸುಷ್ಮಾ ಹೆಸರು ದಟ್ಟವಾಗಲು ಕಾರಣ ಎನ್ನಲಾಗಿದೆ.
ಜೂನ್ 25ರಿಂದ ಪ್ರಧಾನಿ ಮೋದಿ ಅವರು ಅಮೆರಿಕಕ್ಕೆ ತೆರಳುವ ಮೊದಲು ಎನ್ಡಿಎ ಅಭ್ಯರ್ಥಿಯ ಬಹುತೇಕ ಹೆಸರು ಪ್ರಕಟವಾಗುವ ಸಾಧ್ಯತೆ ಹೆಚ್ಚು ಎಂದು ಬಿಜೆಪಿ ಮೂಲಗಳು ತಿಳಿಸಿವೆ.
ರಾಷ್ಟ್ರಪತಿ ಹುದ್ದೆಗೆ ಒಮ್ಮತದ ಅಭ್ಯರ್ಥಿ ಆಯ್ಕೆಗೆ ಕಸರತ್ತು ಮುಂದುವರಿದಿದ್ದು ಕೇಂದ್ರ ಸಚಿವರಾದ ರಾಜನಾಥ್ ಸಿಂಗ್ ಮತ್ತು ವೆಂಕಯ್ಯ ನಾಯ್ಡು ಶುಕ್ರವಾರ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಸಿಪಿಎಂ ಮುಖಂಡ ಸೀತಾರಾಂ ಯೆಚೂರಿ ಅವರನ್ನು ಭೇಟಿ ಮಾಡಲಿದ್ದಾರೆ.
*** ಉದ್ಧವ್ ಜತೆ ಚರ್ಚೆ
ಬಿಜೆಪಿ ಅಧ್ಯಕ್ಷ ಅಮಿತ್ ಷಾ ಭಾನುವಾರ ಮಿತ್ರಪಕ್ಷ ಶಿವಸೇನಾ ಮುಖ್ಯಸ್ಥ ಉದ್ಧವ್ ಠಾಕ್ರೆ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಲಿದ್ದಾರೆ. ರಾಷ್ಟ್ರಪತಿ ಚುನಾವಣೆಯಲ್ಲಿ ಸ್ವತಂತ್ರ ನಿರ್ಧಾರ ತೆಗೆದುಕೊಳ್ಳಲು ಹಿಂದೆಮುಂದೆ ನೋಡುವುದಿಲ್ಲ ಎಂಬ ಸಂದೇಶವನ್ನು ಶಿವಸೇನಾ ರವಾನಿಸಿದ ಬೆನ್ನಲ್ಲೇ ಷಾ ಮುಂಬೈಗೆ ದೌಡಾಯಿಸಲಿದ್ದಾರೆ.