‘ಸಂಬಂಧಿಸಿದ ಕಡತ ತಮ್ಮ ಅವಗಾಹನೆಗೆ ಬಂದ ಕೂಡಲೇ ಅಂಕಿತ ಹಾಕುವುದಾಗಿ ರಾಷ್ಟ್ರಪತಿ ಭರವಸೆ ನೀಡಿದ್ದಾರೆ’ ಎಂದು ನಿಯೋಗದಲ್ಲಿದ್ದ ಶಾಸಕ ಸತೀಶ್ ಜಾರಕಿಹೊಳಿ ತಿಳಿಸಿದರು.
ಲೋಕೋಪಯೋಗಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಜಿಲ್ಲಾ ಪಂಚಾಯಿತಿ, ಜಲಸಂಪನ್ಮೂಲ ಇಲಾಖೆ, ಸಣ್ಣ ನೀರಾವರಿ ಇಲಾಖೆ ಹಾಗೂ ವಿವಿಧ ನಿಗಮಗಳಲ್ಲಿ ಕೈಗೊಳ್ಳುವ ₹50 ಲಕ್ಷವರೆಗಿನ ಕಾಮಗಾರಿಗಳ ಗುತ್ತಿಗೆಯಲ್ಲಿ ಮೀಸಲಾತಿ ನೀಡಲು ರಾಜ್ಯ ಸರ್ಕಾರ ಸುಗ್ರೀವಾಜ್ಞೆ ತಂದಿತ್ತು.
ಅದಕ್ಕೆ ಅಂಕಿತ ಹಾಕುವಂತೆ ರಾಜ್ಯಪಾಲ ವಜುಭಾಯಿ ವಾಲಾ ಅವರಿಗೆ ಕಳುಹಿಸಿತ್ತು. ವಿಧಾನಮಂಡಲದ ಉಭಯ ಸದನಗಳಲ್ಲಿ ಚರ್ಚಿಸಿ ಮಸೂದೆಗೆ ಅಂಗೀಕಾರ ಪಡೆಯುವಂತೆ ರಾಜ್ಯಪಾಲರು ಸರ್ಕಾರಕ್ಕೆ ಸೂಚಿಸಿದ್ದರು.
ಏತನ್ಮಧ್ಯೆ ರಾಜ್ಯಪಾಲರನ್ನು ಭೇಟಿ ಮಾಡಿದ್ದ ಸಚಿವ ಆಂಜನೇಯ, ಪರಿಶಿಷ್ಟ ಸಮುದಾಯದ ಅಭಿವೃದ್ಧಿಯ ದೃಷ್ಟಿಯಿಂದ ಮಹತ್ವದ್ದಾಗಿರುವ ಸುಗ್ರೀವಾಜ್ಞೆಗೆ ಅಂಕಿತ ಹಾಕುವಂತೆ ಮನವಿ ಮಾಡಿದ್ದರು. ಅದನ್ನು ಒಪ್ಪದ ರಾಜ್ಯಪಾಲರು, ರಾಷ್ಟ್ರಪತಿಗೆ ಕಳುಹಿಸಿದ್ದರು. ಸಂಬಂಧಪಟ್ಟ ಕಡತವು ಕೇಂದ್ರ ಗೃಹ ಸಚಿವಾಲಯ, ಕಾನೂನು ಸಚಿವಾಲಯದ ಅಭಿಪ್ರಾಯದೊಂದಿಗೆ ಇತ್ತೀಚೆಗೆ ರಾಷ್ಟ್ರಪತಿ ಭವನಕ್ಕೆ ಕಳುಹಿಸಲಾಗಿದೆ.