ನವದೆಹಲಿ: ಎನ್ಡಿಎಯಿಂದ ರಾಷ್ಟ್ರಪತಿ ಅಭ್ಯರ್ಥಿ ಅಂತಿಮಗೊಂಡಿದ್ದು, ಸೂಕ್ತ ಅಭ್ಯರ್ಥಿ ಆಯ್ಕೆಗೆ ಕಾಂಗ್ರೆಸ್ ಇನ್ನೂ ಕಸರತ್ತು ಮುಂದುವರಿಸಿದೆ. ಈ ಸಂಬಂಧ ಅಂತಿಮ ತೀರ್ಮಾನ ಕೈಗೊಳ್ಳಲು ಸಭೆ ಕರೆಯಲಿದೆ.
ಅಭ್ಯರ್ಥಿ ಆಯ್ಕೆ ಸಂಬಂಧ ಕಾಂಗ್ರೆಸ್ 22ರಂದು ಸಭೆ ಕರೆದು ಚರ್ಚೆ ನಡೆಸಲಿದೆ.
ಎನ್ಡಿಎ ಆಯ್ಕೆ ಮಾಡಿರುವ ಅಭ್ಯರ್ಥಿ ಕುರಿತು ಯಾವುದೇ ಪ್ರತಿಕ್ರಿಯೆ ನೀಡಲು ನಿರಾಕರಿಸಿರುವ ಕಾಂಗ್ರೆಸ್ನ ವಕ್ತಾರ ಗುಲಾಮ್ ನಬಿ ಆಜಾದ್ ಅವರು, ಪಕ್ಷದ ಅಭ್ಯರ್ಥಿ ಆಯ್ಕೆ ಸಂಬಂಧ ಇದೇ 22ರಂದು ಸಭೆ ಕರೆದು ಚರ್ಚಿಸಿ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
ಬಿಹಾರದ ರಾಜ್ಯಪಾಲ ಹಾಗೂ ದಲಿತ ನಾಯಕ ರಾಮನಾಥ್ ಕೋವಿಂದ್ ಅವರನ್ನು ಅಭ್ಯರ್ಥಿಯಾಗಿ ಘೋಷಿಸಿರುವ ಎನ್ಡಿಎ, ತಮ್ಮ ಅಭ್ಯರ್ಥಿಯ ಗೆಲುವಿಗೆ ಕಸರತ್ತು ಆರಂಭಿಸಿದೆ.
ಮತ್ತೊಂದೆಡೆ ಪ್ರಧಾನಿ ನರೇಂದ್ರ ಮೋದಿ ಅವರು ಕಾಂಗ್ರೆಸ್ನ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಮಾಜಿ ಪ್ರಧಾನಿ ಮನಮೋಹನ ಸಿಂಗ್ ಅವರನ್ನು ಸಂಪರ್ಕಿಸಿ ರಾಮನಾಥ್ ಕೋವಿಂದ್ ಅವರನ್ನು ಬೆಂಬಲಿಸುವಂತೆ ಮನವಿ ಮಾಡಿದ್ದಾರೆ.