ಹಾವೇರಿ: ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣವೊಂದಕ್ಕೆ ಸಂಬಂಧಿಸಿದ ಕೋರ್ಟ್ ವಾರಂಟ್ ನಿರ್ಲಕ್ಷಿಸಿದ್ದ ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ, ವಿಧಾನ ಪರಿಷತ್ ಮಾಜಿ ಸದಸ್ಯ ಶಿವರಾಜ ಸಜ್ಜನರ ಅವರನ್ನು ಸೋಮವಾರ ಬಂಧಿಸಲಾಗಿದೆ.
2013ರ ವಿಧಾನಸಭೆ ಚುನಾವಣೆಯ ಸಂದರ್ಭದಲ್ಲಿ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದ ಮೇಲೆ ಚುನಾವಣಾ ಆಯೋಗವು ಶಿವರಾಜ ಸಜ್ಜನರ ವಿರುದ್ಧ ದೂರು ದಾಖಲಿಸಿತ್ತು. ಆದರೆ, ಈ ಪ್ರಕರಣದ ವಿಚಾರಣೆಗಳಿಗೆ ಅವರು ಗೈರಾಗಿದ್ದರು. ಈ ಹಿನ್ನೆಲೆಯಲ್ಲಿ ಜಿಲ್ಲಾ ನ್ಯಾಯಾಲಯವು ವಾರಂಟ್ ಹೊರಡಿಸಿತ್ತು.
ವಾರಂಟ್ ಜಾರಿಯನ್ನು ಹಿಂಪಡೆಯುವಂತೆ ಕೋರಿ ಸೋಮವಾರ ನ್ಯಾಯಾಲಯಕ್ಕೆ ಹಾಜರಾದ ಅವರಿಗೆ ಜುಲೈ 10ರ ತನಕ ನ್ಯಾಯಾಂಗ ಬಂಧನಕ್ಕೆ ನೀಡುವಂತೆ ನ್ಯಾಯಾಧೀಶ ಎನ್. ಸುನೀಲ್ ಕುಮಾರ್ ಸಿಂಗ್ ಆದೇಶಿಸಿದರು. ಅನಾರೋಗ್ಯ ಕಾರಣ ಸಜ್ಜನರ ಅವರನ್ನು ರಾತ್ರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಯಿತು.