ಬೆಂಗಳೂರು: ‘ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಹಾಗೂ ನನ್ನ ವಿರುದ್ಧ ಕೀಳು ಭಾಷೆಯಲ್ಲಿ ಟೀಕಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಮೂರು ದಿನದೊಳಗೆ ಬಹಿರಂಗವಾಗಿ ಕ್ಷಮೆ ಕೇಳದಿದ್ದರೆ ಅವರ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುತ್ತೇನೆ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಎಚ್ಚರಿಸಿದರು.
ವಿಸ್ತಾರಕ್ ಕಾರ್ಯಕ್ರಮದಡಿ ಮನೆ ಮನೆ ಸಂಪರ್ಕಿಸುವ ಅಭಿಯಾನವನ್ನು ಇಲ್ಲಿನ ಸಂಪಂಗಿರಾಮನಗರದಲ್ಲಿ ಮಂಗಳವಾರ ಆರಂಭಿಸಿದ ಬಳಿಕ ಅವರು ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದರು.
‘ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಾರದೇ ಇದ್ದರೆ ಅಮಿತ್ ಷಾ ಹಾಗೂ ಯಡಿಯೂರಪ್ಪ ಜೈಲಿನಲ್ಲಿ ಇರುತ್ತಿದ್ದರು’ ಎಂದು ಸಿದ್ದರಾಮಯ್ಯ ಟೀಕಿಸಿದ್ದರು.
ಇದಕ್ಕೆ ಪ್ರತಿಕ್ರಿಯಿಸಿದ ಯಡಿಯೂರಪ್ಪ, ‘ದಲಿತರ ಕೇರಿಗಳಲ್ಲಿ ನಮಗೆ ಸಿಕ್ಕಿರುವ ಜನ ಬೆಂಬಲದಿಂದ ವಿಚಲಿತರಾಗಿರುವ ಸಿದ್ದರಾಮಯ್ಯ ನಮ್ಮ ಬಗ್ಗೆ ಇಲ್ಲಸಲ್ಲದ ಟೀಕೆ ಮಾಡುತ್ತಿದ್ದಾರೆ’ ಎಂದು ಕಿಡಿ ಕಾರಿದರು.
ಸಂಪಂಗಿ ರಾಮನಗರದಲ್ಲಿರುವ ದೇವಾಂಗ ಸಮುದಾಯದ ನಟರಾಜ್ ಮನೆಯಲ್ಲಿ ಉಪಾಹಾರ ಸೇವಿಸಿದ ಯಡಿಯೂರಪ್ಪ ಮನೆ ಮನೆಗೆ ತೆರಳಿ ಬಿಜೆಪಿ ಸರ್ಕಾರದ ಸಾಧನೆವಿವರಿಸುವ ಕರಪತ್ರಗಳನ್ನು ನೀಡಿದರು.