ನವದೆಹಲಿ: ಕಾವೇರಿ ನದಿಗೆ ಕರ್ನಾಟಕ ಚರಂಡಿ ನೀರು ಹರಿಸುತ್ತಿದೆ ಎಂದು ಆರೋಪಿಸಿ ತಮಿಳುನಾಡು ಸಲ್ಲಿಸಿರುವ ದೂರಿನ ಸತ್ಯಾಸತ್ಯತೆ ಪರೀಕ್ಷಿಸುವಂತೆ ಸುಪ್ರೀಂ ಕೋರ್ಟ್ ಶುಕ್ರವಾರ ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಗೆ ನಿರ್ದೇಶನ ನೀಡಿದೆ.
ಈ ಬಗ್ಗೆ ಕೂಲಂಕಷವಾಗಿ ಪರಿಶೀಲಿಸಿ ಆರು ತಿಂಗಳ ಒಳಗಾಗಿ ವರದಿ ಸಲ್ಲಿಸುವಂತೆ ದ್ವಿಸದಸ್ಯ ನ್ಯಾಯಪೀಠ ಸೂಚಿಸಿದೆ. ತಮಿಳುನಾಡು ಸಲ್ಲಿಸಿರುವ ದೂರು ಮಾಲಿನ್ಯಕ್ಕೆ ಸಂಬಂಧಪಟ್ಟಿದೆ. ಇಂತಹ ಸಂದರ್ಭ ಎದುರಾದಾಗ ಉಭಯ ರಾಜ್ಯಗಳ ಮಾಲಿನ್ಯ ನಿಯಂತ್ರಣ ಮಂಡಳಿಗಳ ಜತೆ ಸಮನ್ವಯ ಸಾಧಿಸುವ ಮೂಲಕ ಪ್ರಕರಣ ಇತ್ಯರ್ಥಗೊಳಿಸುವುದು ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಯ ಕೆಲಸ ಎಂದು ಅಭಿಪ್ರಾಯಪಟ್ಟಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದ ಎಲ್ಲ ದಾಖಲೆಗಳನ್ನು ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಗೆ ಹಸ್ತಾಂತರಿಸುವುದಾಗಿ ಕೋರ್ಟ್ ಹೇಳಿದೆ. ಇದು ನಿರ್ದಿಷ್ಟ ಅಭಿಪ್ರಾಯಕ್ಕೆ ಬರಲು ಮಂಡಳಿಗೆ ನೆರವಾಗಲಿದೆ ಎಂದು ಹೇಳಿದೆ.
ತಮಿಳುನಾಡು ಮತ್ತು ಕರ್ನಾಟಕ ಆಗಸ್ಟ್ 1ರಂದು ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ ಎದುರು ಹಾಜರಾಗುವಂತೆ ಪೀಠ ಸೂಚಿಸಿದೆ.