ಜಮ್ಮು: ಕದನ ವಿರಾಮ ಉಲ್ಲಂಘಿಸಿರುವ ಪಾಕಿಸ್ತಾನ ಸೇನೆ ಜಮ್ಮು ಮತ್ತು ಕಾಶ್ಮೀರದ ಪೂಂಜ್ ಜಿಲ್ಲೆ ವ್ಯಾಪ್ತಿಯ ಗಡಿ ನಿಯಂತ್ರಣ ರೇಖೆಯಲ್ಲಿ ಸೇನಾ ನೆಲೆಗಳು ಹಾಗೂ ಗ್ರಾಮಗಳ ಮೇಲೆ ಶನಿವಾರ ಗುಂಡಿನ ದಾಳಿ ನಡೆಸಿದ್ದು, ಇಬ್ಬರು ನಾಗರಿಕರು ಮೃತಪಟ್ಟಿದ್ದಾರೆ. ಹಲವು ಮಂದಿ ಗಾಯಗೊಂಡಿದ್ದಾರೆ.
ಪಾಕಿಸ್ತಾನ ಸೇನೆಯು ಗಡಿಯಲ್ಲಿ ಅಪ್ರಚೋದಿತ ದಾಳಿ ನಡೆಸಿದ್ದು, ಸೇನಾ ನೆಲೆ ಮತ್ತು ಗ್ರಾಮಗಳ ಮೇಲೆ ಬೆಳಿಗ್ಗೆ 6.30ಕ್ಕೆ ಸಣ್ಣ ಪ್ರಮಾಣದ ಶಸ್ತ್ರಾಸ್ತ್ರ, ಸ್ವಯಂಚಾಲಿತ ಬಂದೂಕುಗಳನ್ನು ಬಳಸಿ ಷೆಲ್ ಹಾಗೂ ಗುಂಡಿನ ದಾಳಿ ನಡೆಸಿದೆ ಎಂದು ರಕ್ಷಣಾಪಡೆಯ ವಕ್ತಾರರು ತಿಳಿಸಿದ್ದಾರೆ.
ಪಾಕಿಸ್ತಾನ ನಡೆಸಿದ ದಾಳಿಗೆ ಭಾರತಿಯ ಪಡೆ ಪ್ರತಿ ದಾಳಿ ನಡೆಸಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಪಾಕಿಸ್ತಾನ ಪಡೆ ಗ್ರಾಮಗಳನ್ನು ಗುರಿಯಾಗಿರಿಸಿ ಭಾರೀ ಗುಂಡಿನ ಮಳೆಗರೆದಿದೆ. ಗಡಿಯುದ್ದಕ್ಕೂ ಗುಂಡಿನ ದಾಳಿ ನಡೆಸಿದ್ದು, ಖಾದಿ ಕರ್ಮಾರ ಗ್ರಮದಲ್ಲಿ ಇಬ್ಬರು ನಾಗರಿಕರು ಮೃತಪಟ್ಟಿದ್ದಾರೆ. ಹಲವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಪಾಕಿಸ್ತಾನ ಸೇನೆ 23 ಬಾರಿ ಕದನ ವಿರಾಮ ಉಲ್ಲಂಘಿಸಿ ದಾಳಿ ನಡೆಸಿದೆ.