ನರಗುಂದ (ಗದಗ ಜಿಲ್ಲೆ): ಕಳಸಾ– ಬಂಡೂರಿ, ಮಹದಾಯಿ ಯೋಜನೆ ಜಾರಿಗೆ ಆಗ್ರಹಿಸಿ ಇಲ್ಲಿ ನಡೆಯುತ್ತಿರುವ ರೈತರ ನಿರಂತರ ಧರಣಿ ಸತ್ಯಾಗ್ರಹ ಭಾನುವಾರಕ್ಕೆ (ಜುಲೈ 16) ಎರಡು ವರ್ಷ ಪೂರೈಸಲಿದೆ. ಇದರ ಅಂಗವಾಗಿ ರೈತರ ಬೃಹತ್ ಸಮಾವೇಶ ಆಯೋಜಿಸಲಾಗಿದೆ.
‘ಮಾಡು ಇಲ್ಲವೇ ಮಡಿ ಧ್ಯೇಯದೊಂದಿಗೆ ಹೋರಾಟ ಮುಂದುವರಿಸಲಾಗುವುದು. ಸಮಾವೇಶದಲ್ಲಿ 20 ಸಾವಿರಕ್ಕೂ ಹೆಚ್ಚು ಜನರು ಭಾಗವಹಿಸುವ ನಿರೀಕ್ಷೆ ಇದೆ’ ಎಂದು ರೈತ ಸೇನಾ ರಾಜ್ಯ ಘಟಕದ ಅಧ್ಯಕ್ಷ ವೀರೇಶ ಸೊಬರದಮಠ ಹೇಳಿದರು.
‘ಸಮಾವೇಶದಲ್ಲಿ ಭಾಗವಹಿಸುವಂತೆ 800 ಸಂಘಟನೆಗಳಿಗೆ ಪತ್ರ ಬರೆಯಲಾಗಿದೆ. ನಾಡಿನ 140 ಮಠಾಧೀಶ
ರಿಗೂ ಮನವಿ ಮಾಡಿಕೊಳ್ಳಲಾಗಿದೆ’ ಎಂದು ಅವರು ತಿಳಿಸಿದರು.
ಬಿಗಿ ಭದ್ರತೆ: ‘ಮುನ್ನೆಚ್ಚರಿಕೆ ಕ್ರಮವಾಗಿ ನರಗುಂದದಲ್ಲಿ ಬಿಗಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ಸಂತೋಷಬಾಬು ತಿಳಿಸಿದರು.
ರೋಣ ಬಂದ್: ಯೋಜನೆ ಜಾರಿಗಾಗಿ ಆಗ್ರಹಿಸಿ ಕರೆ ನೀಡಿದ್ದ ರೋಣ ಬಂದ್ ಶನಿವಾರ ಯಶಸ್ವಿಯಾಗಿದೆ. ಗಜೇಂದ್ರ ಗಡದಲ್ಲಿಯೂ ರೈತರು ಪ್ರತಿಭಟನೆ ನಡೆಸಿದರು.
ಹುಬ್ಬಳ್ಳಿ ತಾಲ್ಲೂಕಿನ ಕುಸುಗಲ್ನಲ್ಲಿ ರೈತರು ಸುಮಾರು ಒಂದು ತಾಸು ವಾಹನ ತಡೆದು ಪ್ರತಿಭಟನೆ ನಡೆಸಿದರು. ಇದರಿಂದ ಹುಬ್ಬಳ್ಳಿ– ವಿಜಯಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರದಲ್ಲಿ ವ್ಯತ್ಯಯ ಉಂಟಾಯಿತು. ಸುಳ್ಳ ಮತ್ತು ಹೆಬಸೂರಿನ ಮೂಲಕ ಬದಲಿ ಮಾರ್ಗದಲ್ಲಿ ವಾಹನ ಸಂಚರಿಸಲು ಪೊಲೀಸರು ಅನುವು ಮಾಡಿಕೊಟ್ಟರು.