ಹೊಸಕೋಟೆ: ‘ಕನ್ನಡಿಗರ ಮೇಲೆ ಹಿಂದಿ ಭಾಷೆಯ ಹೇರಿಕೆ ಸಲ್ಲದು’ ಎಂದು ಸಾಹಿತಿ ಡಾ.ದೊಡ್ಡರಂಗೇಗೌಡ ಹೇಳಿದರು.
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಕೇಂದ್ರ ಕನ್ನಡ ಕ್ರಿಯಾ ಸಮಿತಿಯ ಪಟ್ಟಣದಲ್ಲಿ ಭಾನುವಾರ ಆಯೋಜಿಸಿದ್ದ ‘ಕನ್ನಡ ಜಾಗೃತಿ’ ಸಮ್ಮೇಳನದಲ್ಲಿ ಅವರು ಮಾತನಾಡಿದರು.
‘ಒಂದು ಭಾಷೆಯಾಗಿ ಇಂಗ್ಲಿಷ್, ಹಿಂದಿ ಭಾಷೆಯನ್ನು ಕಲಿಯೋಣ. ಆದರೆ, ಆ ಭಾಷೆಗಳನ್ನು ಒತ್ತಾಯಪೂರ್ವಕವಾಗಿ ಹೇರುವುದನ್ನು ಯಾರೂ ಸಹಿಸಬಾರದು’ ಎಂದರು.
‘ಇಂಗ್ಲಿಷ್ ಮಾಧ್ಯಮ ಶಾಲೆಗಳಲ್ಲಿ ಕನ್ನಡವನ್ನು ಕೀಳಾಗಿ ಕಾಣಲಾಗುತ್ತಿದೆ. ಉದ್ಯೋಗದಲ್ಲೂ ಕನ್ನಡಿಗರಿಗೆ ಸರಿಯಾದ ಪ್ರಾತಿನಿಧ್ಯ ಸಿಗುತ್ತಿಲ್ಲ. ಈ ಬಗ್ಗೆ ಹೋರಾಟ ಮಾಡಬೇಕು’ ಎಂದು ತಿಳಿಸಿದರು.
‘ಪ್ರತಿಯೊಬ್ಬರೂ ಕನ್ನಡದ ಬಗ್ಗೆ ಸ್ವಾಭಿಮಾನ ಬೆಳೆಸಿಕೊಳ್ಳಬೇಕು. ಕನ್ನಡೇತರರಿಗೂ ಕನ್ನಡ ಭಾಷೆ ಕಲಿಸಬೇಕು’ ಎಂದು ಸಲಹೆ ಅವರು ನೀಡಿದರು.