ಬೆಂಗಳೂರು: ಅನ್ನಪೂರ್ಣೇಶ್ವರಿನಗರ ಸಮೀಪದ ನರಸಾಪುರದಲ್ಲಿ ದುಷ್ಕರ್ಮಿಗಳು ತಲೆ ಮೇಲೆ ಕಲ್ಲು ಎತ್ತಿ ಹಾಕಿ ಯುವತಿಯನ್ನು
ಹತ್ಯೆಗೈದಿದ್ದಾರೆ.
ನರಸಾಪುರದ ನಿರ್ಜನ ಪ್ರದೇಶದಲ್ಲಿ ಭಾನುವಾರ ಬೆಳಿಗ್ಗೆ 9 ಗಂಟೆ ಸುಮಾರಿಗೆ ಮೃತದೇಹವನ್ನು ಕಂಡ ಸ್ಥಳೀಯರು, ಪೊಲೀಸ್ ನಿಯಂತ್ರಣ ಕೊಠಡಿಗೆ ಕರೆ ಮಾಡಿದ್ದಾರೆ. ಶ್ವಾನ ಹಾಗೂ ಬೆರಳಚ್ಚು ದಳಗಳೊಂದಿಗೆ ಸ್ಥಳಕ್ಕೆ ದೌಡಾಯಿಸಿದ ಅನ್ನಪೂರ್ಣೇಶ್ವರಿನಗರ ಪೊಲೀಸರು ಸ್ಥಳ ಪರಿಶೀಲನೆ ನಡೆಸಿ ಮಾಹಿತಿ ಸಂಗ್ರಹಿಸಿದ್ದಾರೆ.
ಮೃತರ ವಯಸ್ಸು 20 ರಿಂದ 25 ವರ್ಷ ಇರಬಹುದು. ಅವರ ಹೆಸರು–ವಿಳಾಸದ ಬಗ್ಗೆ ಮಾಹಿತಿ ಸಿಕ್ಕಿಲ್ಲ. ಬಲಗೈಯಲ್ಲಿ ‘ಸ್ವಾಮಿ’ ಎಂದು ಹಚ್ಚೆ ಹಾಕಿಸಿಕೊಂಡಿದ್ದಾರೆ. ಸ್ಥಳೀಯರನ್ನು ವಿಚಾರಣೆ ನಡೆಸಿ ಮೃತರ ಗುರುತು ಪತ್ತೆ ಕಾರ್ಯದಲ್ಲಿ ತೊಡಗಿದ್ದೇವೆ ಎಂದು ಪೊಲೀಸರು ಹೇಳಿದ್ದಾರೆ.
ಶನಿವಾರ ರಾತ್ರಿ ಯುವತಿ
ಯನ್ನು ಇಲ್ಲಿಗೆ ಕರೆದುಕೊಂಡು ಬಂದಿರುವ ದುಷ್ಕರ್ಮಿಗಳು, ಮೊದಲು ಟವೆಲ್ನಿಂದ ಕುತ್ತಿಗೆ ಬಿಗಿದು ಉಸಿರುಗಟ್ಟಿಸಿದ್ದಾರೆ. ಗುರುತು ಸಿಗಬಾರದೆಂದು ಮುಖವನ್ನು ಜಜ್ಜಿ ನಂತರ ತಲೆ ಮೇಲೆ ಕಲ್ಲು ಹಾಕಿ ಹೋಗಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.