ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲಾಲ್‌ ಬಹದ್ದೂರ್ ಶಾಸ್ತ್ರಿ, ಗಾಂಧೀಜಿಗೆ ನಮನ

Last Updated 3 ಅಕ್ಟೋಬರ್ 2017, 7:14 IST
ಅಕ್ಷರ ಗಾತ್ರ

ಚಿಕ್ಕಮಗಳೂರು: ಜಿಲ್ಲಾಡಳಿತ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ನಗರಸಭೆ, ನೆಹರು ಯುವ ಕೇಂದ್ರದ ಸಹಯೋಗದಲ್ಲಿ ಗಾಂಧೀಜಿ ಹಾಗೂ ಮಾಜಿ ಪ್ರಧಾನಿ ಲಾಲ್‌ಬಹದ್ದೂರ್ ಶಾಸ್ತ್ರಿ ಜಯಂತ್ಯುತ್ಸವ ಆಚರಿಸಲಾಯಿತು.

ನಗರದ ಮಹಾತ್ಮ ಗಾಂಧಿ ಉದ್ಯಾನದಲ್ಲಿ ಸೋಮವಾರ ಬೆಳಿಗ್ಗೆ 9 ಗಂಟೆಗೆ ಮಹಾತ್ಮ ಗಾಂಧಿ ಅವರ ಮಾಲಾರ್ಪಣೆ ಮಾಡಲಾಯಿತು. ವಿದ್ಯಾರ್ಥಿಗಳು ‘ರಘುಪತಿ ರಾಘವ ರಾಜಾರಾಂ...’ ಗೀತೆ ಹಾಡಿದರು.

ಧಾರ್ಮಿಕ ಮುಖಂಡರಾದ ಶಶಿಕಾಂತ್ ಭಟ್ ಅವರು ಭಗವದ್ಗೀತೆ ಪಾರಾಯಣ, ರಾಹಿಕ್ ಖಸ್ಮಿ ಅವರು ಖುರಾನ್ ಪಠಣ, ಫಾದರ್ ಫ್ರಾನ್ಸಿಸ್ ಅವರು ಬೈಬಲ್ ಪ್ರವಚನ ಮಾಡಿದರು.

ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಚ್‌.ಜಗದೀಶ್, ಉಪ ವಿಭಾಗಾಧಿಕಾರಿ ಸಂಗಪ್ಪ, ಉಪಕಾರ್ಯದರ್ಶಿ ರಾಜ್‌ಗೋಪಾಲ್, ತಹಶೀಲ್ದಾರ್ ಶಿವಣ್ಣ, ಕಾಂಗ್ರೆಸ್‌ ಮುಖಂಡ ಡಾ.ಡಿ.ಎಲ್.ವಿಜಯಕುಮಾರ್, ಬಿಎಸ್‌ಪಿ ಜಿಲ್ಲಾಧ್ಯಕ್ಷ ಕೆ.ಟಿ.ರಾಧಾಕೃಷ್ಣ ಇದ್ದರು.

***
ಗಾಂಧಿ, ಶಾಸ್ತ್ರಿ ದೇಶದ ಎರಡು ಕಣ್ಣುಗಳು

ಮೂಡಿಗೆರೆ: ಮಹಾತ್ಮ ಗಾಂಧೀಜಿ ಹಾಗೂ ಲಾಲ್‌ ಬಹದ್ದೂರ್‌ ಶಾಸ್ತ್ರಿ ಅವರು ಎರಡು ಕಣ್ಣುಗಳಂತೆ ಕಾರ್ಯನಿರ್ವಹಿಸಿ ಭಾರತದ ಹಿರಿಮೆಯನ್ನು ವಿಶ್ವಕ್ಕೆ ಸಾರಿದರು ಎಂದು ಶಾಸಕ ಬಿ.ಬಿ. ನಿಂಗಯ್ಯ ಅಭಿಪ್ರಾಯಪಟ್ಟರು.

ಪಟ್ಟಣದ ತಾಲ್ಲೂಕು ಕಚೇರಿಯಲ್ಲಿ ಸೋಮವಾರ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಏರ್ಪಡಿಸಿದ್ದ ಗಾಂಧಿ ಜಯಂತಿ ಹಾಗೂ ಲಾಲ್‌ ಬಹದ್ದೂರ್‌ ಶಾಸ್ತ್ರಿ ಜಯಂತಿಯಲ್ಲಿ ಅವರು ಮಾತನಾಡಿದರು.

ಎಲ್ಲ ಧರ್ಮಗಳ ಸಾರವೂ ಒಂದೇ ಆಗಿದ್ದು, ಎಲ್ಲ ಧರ್ಮಗಳನ್ನು ಪ್ರೀತಿಸುವ ಗುಣವನ್ನು ಬೆಳೆಸಿಕೊಳ್ಳಬೇಕು ಎಂಬುದು ಗಾಂಧೀಜಿಯವರ ತತ್ವವಾಗಿದ್ದು, ಅಹಿಂಸೆಯಿಂದ ಕಠಿಣವಾದ ಗೆಲುವನ್ನು ಸಾಧಿಸಬಹುದು ಎಂಬುದನ್ನು ವಿಶ್ವಕ್ಕೆ ತಿಳಿಸಿದ ಮಹಾನ್‌ ವ್ಯಕ್ತಿಯಾಗಿದ್ದಾರೆ. ಅವರ ಹುಟ್ಟು ಹಬ್ಬವನ್ನು ಆಚರಿಸುವ ಮೂಲಕ ಅವರು ಸಾರಿರುವ ತತ್ವಗಳನ್ನು ಮೈಗೂಡಿಸಿಕೊಳ್ಳಬೇಕು ಎಂದರು.

ವಿಧಾನ ಪರಿಷತ್‌ ಸದಸ್ಯೆ ಮೋಟಮ್ಮ ಮಾತನಾಡಿ, ‘ಬೇರೆಯವರ ಗುಲಾಮಗಿರಿಯಲ್ಲಿ ಬದುಕಬಾರದು ಎಂಬುದು ಗಾಂಧೀಜಿಯವರ ತತ್ವವಾಗಿದ್ದು, ಸ್ವಾಭಿಮಾನದ ಬದುಕಿಗೆ ಕರೆಕೊಟ್ಟಿದ್ದರು. ವಿದ್ಯಾರ್ಥಿಗಳು ಸ್ವಾಭಿಮಾನದ ಸ್ವಾವಲಂಬಿ ಬದುಕನ್ನು ನಡೆಸುವ ಮೂಲಕ ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ ವ್ಯಕ್ತಿಗಳಿಗೆ ಕೊಡುಗೆ ನೀಡಬೇಕು ಎಂದರು.

ಇತ್ತೀಚಿನ ದಿನಗಳಲ್ಲಿ ಯುವ ಜನತೆಯಲ್ಲಿ ಸ್ವಾಭಿಮಾನ ಕಡಿಮೆಯಾಗುತ್ತಿರುವುದು, ದೇಶಾಭಿಮಾನ ಮರೆಯಾಗುತ್ತಿರುವುದು ಉತ್ತಮ ಬೆಳವಣಿಗೆಯಲ್ಲ. ಯುವಜನತೆ ದೇಶಾಭಿಮಾನವನ್ನು ಕಳೆದುಕೊಂಡರೆ ದೇಶದ ರಕ್ಷಣೆ ಅಸಾಧ್ಯವಾಗುತ್ತದೆ ಎಂಬುದರ ಅರಿವಿರಬೇಕು. ಸತ್ಯ, ಪ್ರಾಮಾಣಿಕತೆ ಒಂದೇ ನಾಣ್ಯದ ಎರಡು ಮುಖಗಳಾಗಿದ್ದು, ಸತ್ಯಕ್ಕೆ ಎಂದಿಗೂ ಸೋಲಿಲ್ಲ ಎಂಬುದನ್ನು ವಿದ್ಯಾರ್ಥಿಗಳು ಅರಿಯಬೇಕು. ಸಮಾಜದಲ್ಲಿ ಬೇರೂರಿರುವ ಭ್ರಷ್ಟಾಚಾರವನ್ನು ಕಿತ್ತೊಗೆಯುವಲ್ಲಿ ಯುವಜನತೆ ಪಾತ್ರ ವಹಿಸಬೇಕು ಎಂದರು.

ವಿಧಾನ ಪರಿಷತ್‌ ಸದಸ್ಯ ಎಂ.ಕೆ. ಪ್ರಾಣೇಶ್‌ ಮಾತನಾಡಿ, ‘ಗಾಂಧಿ ಜಯಂತಿಯನ್ನು ಕೇವಲ ಒಂದು ದಿನ ಆಚರಣೆ ಮಾಡದೇ ಜೀವನ ಪೂರ್ತಿ ಗಾಂಧಿ ತತ್ವಗಳನ್ನು ಅಳವಡಿಸಿಕೊಳ್ಳುವ ಮೂಲಕ ದೇಶದ ಪರಿವರ್ತನೆಗೆ ಕೊಡುಗೆ ನೀಡಬೇಕು. ಹಳ್ಳಿಗಳು ಸುಧಾರಣೆಯಾಗಬೇಕು ಎಂಬುದು ಗಾಂಧೀಜಿಯವರ ಕನಸಾಗಿದ್ದು, ಯುವ ಜನತೆ ಗ್ರಾಮೀಣ ಪ್ರದೇಶದ ಅಭಿವೃದ್ಧಿಗೆ ಕೊಡುಗೆ ನೀಡಬೇಕು. ದೇಶವನ್ನು ಸ್ವಚ್ಛವಾಗಿಡಲು ಶ್ರಮಿಸಬೇಕು ಎಂದರು.

ವಿಶ್ವೇಶ್ವರ ಭಟ್‌, ಮೌಲಾನ ನಾಜಿಂ ಅಲಿ, ಜ್ಯೋತಿ ಧಾರ್ಮಿಕ ಪಠಣ ಮಾಡಿದರು. ಶಾಸಕರ ಮಾದರಿ ಶಾಲೆಯ ವಿದ್ಯಾರ್ಥಿಗಳು ದೇಶಭಕ್ತಿ ಗೀತೆಗಳನ್ನು ಹಾಡಿದರು. ಜಿಲ್ಲಾ ಪಂಚಾಯಿತಿ ಸದಸ್ಯೆ ಅಮಿತಾ ಮುತ್ತಪ್ಪ, ತಾಲ್ಲೂಕು ಪಂಚಾಯಿತಿ ಸದಸ್ಯ ದೇವರಾಜ್‌, ಪಟ್ಟಣ ಪಂಚಾಯಿತಿ ಸದಸ್ಯರಾದ ರಾಮಕೃಷ್ಣ, ಮದೀಶ್‌, ಲತಾಲಕ್ಷ್ಮಣ್‌, ರಮೇಶ್, ಷಣ್ಮುಖ, ತಹಶೀಲ್ದಾರ್‌ ಸಿ.ಪಿ. ನಂದಕುಮಾರ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT