ಬೆಂಗಳೂರು: ಬಸವನಗುಡಿ ವಿಧಾನಸಭಾ ಕ್ಷೇತ್ರದ ವಿವಿಧ ಕಾಮಗಾರಿಗಳ ಅನುಷ್ಠಾನಕ್ಕಾಗಿ ₹10 ಕೋಟಿ ಬಿಡುಗಡೆ ಮಾಡುವಂತೆ ಬೆಂಗಳೂರು ಅಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್ ಅವರು ಬಿಬಿಎಂಪಿ ಆಯುಕ್ತ ಎನ್.ಮಂಜುನಾಥ್ ಪ್ರಸಾದ್ ಅವರಿಗೆ ಸೂಚಿಸಿದರು.
ಕ್ಷೇತ್ರ ವ್ಯಾಪ್ತಿಯಲ್ಲಿ ಕೈಗೊಂಡಿರುವ ವಿವಿಧ ಕಾಮಗಾರಿಗಳನ್ನು ಸಚಿವ ಜಾರ್ಜ್ ಮಂಗಳವಾರ ಪರಿಶೀಲನೆ ನಡೆಸಿದರು.
ಕಾಳಿದಾಸ ಬಸ್ ನಿಲ್ದಾಣದ ಬಳಿ ನಿರ್ಮಿಸುತ್ತಿರುವ ಮಳೆನೀರು ಚರಂಡಿ ಕಾಮಗಾರಿಯನ್ನು ಪರಿಶೀಲಿಸಿದರು. ಬಳಿಕ, ಮಾರಿಹಳ್ಳ ಮಳೆನೀರು ಕಾಲುವೆ ವೀಕ್ಷಿಸಿದರು. ಇದರ ಸಮೀಪವಿರುವ ಎರಡು ಅನಧಿಕೃತ ಗುಡಿಸಲುಗಳನ್ನು ತೆರವುಗೊಳಿಸಿ, ಕಾಲುವೆಯಲ್ಲಿ ತುಂಬಿರುವ ಹೂಳನ್ನು ತೆಗೆಯುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಮೇಯರ್ ಆರ್.ಸಂಪತ್ ರಾಜ್, ಉಪಮೇಯರ್ ಪದ್ಮಾವತಿ ಹಾಜರಿದ್ದರು.