ಬೆಂಗಳೂರು: ‘ಬೀದಿ ವ್ಯಾಪಾರಿಗಳ ಜೀವನ ಉತ್ತಮಪಡಿಸಲು ಕೇಂದ್ರ ಸರ್ಕಾರ ರಾಷ್ಟ್ರೀಯ ನಗರ ಜೀವನೋಪಾಯ ಕಾರ್ಯಕ್ರಮದಡಿ ಅನೇಕ ಸೌಲಭ್ಯಗಳನ್ನು ಕಲ್ಪಿಸಿದೆ. ಅವುಗಳನ್ನು ಬಳಸಿಕೊಳ್ಳಿ’ ಎಂದು ಗ್ರಾಮಾಂತರ ಜಿಲ್ಲಾಧಿಕಾರಿ ಎಸ್.ಪಾಲಯ್ಯ ತಿಳಿಸಿದರು.
ರಾಜ್ಯ ಪೌರಾಡಳಿತ ನಿರ್ದೇಶನಾಲಯ, ರಾಜ್ಯ ನಗರಾಭಿವೃದ್ಧಿ ಸಂಸ್ಥೆ-ಮೈಸೂರು, ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಹಾಗೂ ಜಿಲ್ಲಾ ನಗರಾಭಿವೃದ್ಧಿ ಕೋಶವು ಬೀದಿ ಬದಿ ವ್ಯಾಪಾರಿಗಳಿಗಾಗಿ ಶುಕ್ರವಾರ ಏರ್ಪಡಿಸಿದ್ದ ‘ತರಬೇತಿ ಕಾರ್ಯಾಗಾರ’ದಲ್ಲಿ ಅವರು ಮಾತನಾಡಿದರು.
‘ನಗರದ ಆರ್ಥಿಕ ವ್ಯವಸ್ಥೆಗೆ ಬೀದಿ ವ್ಯಾಪಾರಿಗಳು ಕೊಡುಗೆ ನೀಡುತ್ತಿದ್ದಾರೆ. ದೀನ್ ದಯಾಳ್ ಅಂತ್ಯೋದಯ ಯೋಜನೆಯಡಿ ಈ ವ್ಯಾಪಾರಿಗಳಿಗೆ ಆರ್ಥಿಕ ನೆರವು ನೀಡುತ್ತಿದ್ದೇವೆ. ಗುರುತಿನ ಚೀಟಿ ವಿತರಿಸಿ ತರಬೇತಿ ನೀಡುತ್ತಿದ್ದೇವೆ. ಸಾಮಾಜಿಕ ಭದ್ರತಾ ಯೋಜನೆಗಳ ಮೂಲಕ ಮೂಲಸೌಕರ್ಯಗಳನ್ನು ಕಲ್ಪಿಸುತ್ತಿದ್ದೇವೆ’ ಎಂದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮೀತ್ ಸಿಂಗ್, ‘ಬೀದಿ ಬದಿ ವ್ಯಾಪಾರ ಮಾಡುವವರು ಪಾದಚಾರಿ ಮಾರ್ಗಗಳನ್ನು ಆಕ್ರಮಿಸಬಾರದು. ಸಂಚಾರ ನಿಯಮಗಳನ್ನು ಪಾಲಿಸಬೇಕು. ನಗರಾಭಿವೃದ್ಧಿ ಅಧಿಕಾರಿಗಳು ವ್ಯಾಪಾರಿಗಳಿಗಾಗಿ ಇರುವ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು’ ಎಂದು ಹೇಳಿದರು.