ಬೆಂಗಳೂರು: ‘ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯ ಜನವಸತಿ ಪ್ರದೇಶಗಳಲ್ಲಿ ಯೋಗ್ಯವಾದ ಸ್ಥಳಗಳಲ್ಲಿ ಮಾತ್ರವೇ ಪಟಾಕಿ ಮಾರಲು ಅವಕಾಶ ನೀಡಬೇಕು’ ಎಂದು ಹೈಕೋರ್ಟ್ ಆದೇಶಿಸಿದೆ.
ಈ ಕುರಿತಂತೆ ಪಟಾಕಿ ಮಾರಾಟಗಾರರು ಸಲ್ಲಿಸಿದ್ದ ಅರ್ಜಿಗಳನ್ನು ಶನಿವಾರ ವಿಲೇವಾರಿ ಮಾಡಿದ ನ್ಯಾಯಮೂರ್ತಿ ಬಿ.ವಿ.ನಾಗರತ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ, ‘ವಸತಿ ಪ್ರದೇಶಗಳಲ್ಲಿ ಖಾಲಿ ಜಾಗಗಳು ಮತ್ತು ಆಟದ ಮೈದಾನಗಳಲ್ಲಿ ಮಾತ್ರವೇ ಚಿಲ್ಲರೆ ಮಾರಾಟಕ್ಕೆ ಅವಕಾಶ ನೀಡಬೇಕು’ ಎಂದು ನಿರ್ದೇಶಿಸಿದೆ.
‘ಮಾರಾಟ ಪರವಾನಗಿ ಕೋರಿ ಸಲ್ಲಿಸಲಾಗುವ ಅರ್ಜಿಗಳನ್ನು ಸಂಬಂಧಿಸಿದ ಬಿಬಿಎಂಪಿ ಹಾಗೂ ಬೆಂಗಳೂರು ಪೊಲೀಸ್ ಕಮಿಷನರ್ ಕಾನೂನು ರೀತ್ಯಾ ಪರಿಶೀಲಿಸಿ ಕ್ರಮ ಕೈಗೊಳ್ಳಬೇಕು’ ಎಂದೂ ಆದೇಶದಲ್ಲಿ ತಿಳಿಸಲಾಗಿದೆ.