ಮೈಸೂರು: ಡಾ.ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಮುಖಂಡ ಬಿ.ಜೆ.ಪುಟ್ಟಸ್ವಾಮಿ ಮಾಡಿದ ಆರೋಪ ರಾಜಕೀಯ ಪ್ರೇರಿತ ಎಂದು ತಳ್ಳಿಹಾಕಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ‘ಆಧಾರ ರಹಿತ ಆರೋಪ ಮಾಡಿದವರ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸುವಂತೆ ಯತಿಂದ್ರನಿಗೆ ಹೇಳುತ್ತೇನೆ’ ಎಂದರು.
ಯತೀಂದ್ರ ಅವರಿಗೆ ಸೇರಿದ ಶಾಂತಲಾ ಇಂಡಸ್ಟ್ರೀಸ್ಗೆ ಬೆಂಗಳೂರಿನ ಮಹಾಲಕ್ಷ್ಮಿ ಬಡಾವಣೆಯಲ್ಲಿ ಎರಡು ಎಕರೆ ಜಮೀನನ್ನು ಅಕ್ರಮವಾಗಿ ಮಂಜೂರು ಮಾಡಲಾಗಿದೆ ಎಂಬ ಪುಟ್ಟಸ್ವಾಮಿ ಅವರ ಆರೋಪಕ್ಕೆ ಸಂಬಂಧಿಸಿದಂತೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಮುಖ್ಯಮಂತ್ರಿ ಸಿಡಿಮಿಡಿಗೊಂಡರು.
‘ನನ್ನ ಪುತ್ರ ಯಾವುದೇ ರೀತಿಯ ಅಕ್ರಮ ಎಸಗಿಲ್ಲ. ಅಧಿಕಾರ ದುರುಪಯೋಗವೂ ಆಗಿಲ್ಲ. ಚುನಾವಣೆ ಸಮೀಪಿಸುತ್ತಿದ್ದಂತೆ ಬಿಜೆಪಿ ಸುಳ್ಳು ಆರೋಪ ಮಾಡುತ್ತಿದೆ. ಸಂಸದೆ ಶೋಭಾ ಕರಂದ್ಲಾಜೆ ಕೂಡ ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ’ ಎಂದು ಹರಿಹಾಯ್ದರು.