ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಏಪ್ರಿಲ್‌ವರೆಗೆ ಶಿರಾಡಿ ಘಾಟಿ ರಸ್ತೆ ಬಂದ್‌

ಕಾಂಕ್ರೀಟ್ ರಸ್ತೆ ಕಾಮಗಾರಿ ನವೆಂಬರ್‌ನಲ್ಲಿ ಆರಂಭ
Last Updated 7 ಅಕ್ಟೋಬರ್ 2017, 19:30 IST
ಅಕ್ಷರ ಗಾತ್ರ

ಬೆಂಗಳೂರು: ಬೆಂಗಳೂರು–ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಶಿರಾಡಿ ಘಾಟಿಯಲ್ಲಿ 12.38 ಕಿ.ಮೀ ಕಾಂಕ್ರೀಟ್ ರಸ್ತೆ ಕಾಮಗಾರಿಯನ್ನು ನವೆಂಬರ್ ನಲ್ಲಿ ಆರಂಭಿಸಲು ಲೋಕೋಪಯೋಗಿ ಇಲಾಖೆಯ ರಾಷ್ಟ್ರೀಯ ಹೆದ್ದಾರಿ ವಲಯ ಸಿದ್ಧತೆ ನಡೆಸಿದೆ.

‘ಟೆಂಡರ್ ಪ್ರಕ್ರಿಯೆ ಅಂತಿಮ ಹಂತದಲ್ಲಿದ್ದು, ಕೇಂದ್ರ ಭೂಸಾರಿಗೆ ಸಚಿವಾಲಯದಿಂದ ಆರ್ಥಿಕ ಅನುಮೋದನೆ ದೊರೆಯಬೇಕಿದ್ದು, ಮುಂದಿನ ವಾರ ಅನುಮೋದನೆ ದೊರೆಯುವ ಸಾಧ್ಯತೆ ಇದೆ’ ಎಂದು ಅಧಿಕಾರಿಗಳು ‘ಪ್ರಜಾವಾಣಿ’ಗೆ ಮಾಹಿತಿ ನೀಡಿದರು.

ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನ ಕೆಂಪುಹೊಳೆ ಸೇತುವೆಯಿಂದ ದಕ್ಷಿಣ ಕನ್ನಡ ಜಿಲ್ಲೆಯ ಅಡ್ಡಹೊಳೆ ಸೇತುವೆ ತನಕ 12.38 ಕಿ.ಮೀ ಕಾಂಕ್ರೀಟ್‌ ರಸ್ತೆ ನಿರ್ಮಾಣ ಆಗಬೇಕಿದೆ.

’ಕಾಂಕ್ರೀಟ್ ಕೆಲಸ ಆರಂಭಿಸುವ ಮುನ್ನ ಜಲ್ಲಿ, ಮರಳು, ಕಬ್ಬಿಣ, ಸಿಮೆಂಟ್ ದಾಸ್ತಾನು ಮಾಡಿಕೊಳ್ಳಬೇಕಿದೆ. ಈ ಕೆಲಸಕ್ಕೆ ಮಳೆ ಅಡ್ಡಿಯಾಗುವುದಿಲ್ಲ. ಹೀಗಾಗಿ ಅಗತ್ಯಕ್ಕೆ ತಕ್ಕಷ್ಟು ಕಚ್ಚಾ ಸಾಮಗ್ರಿಗಳನ್ನು ದಾಸ್ತಾನು ಮಾಡಿಕೊಳ್ಳಲಾಗುವುದು. ಮಳೆ ಸಂಪೂರ್ಣ ನಿಂತ ಬಳಿಕ ನವೆಂಬರ್ ನಲ್ಲಿ ಕಾಂಕ್ರೀಟ್ ಕಾಮಗಾರಿ ಆರಂಭವಾಗಲಿದೆ’ ಎಂದರು.

‘ಕಾಂಕ್ರೀಟ್ ಕೆಲಸ ನಡೆಯುವ ಸಂದರ್ಭದಲ್ಲಿ ಈ ರಸ್ತೆಯಲ್ಲಿ ವಾಹನ ಸಂಚಾರ ಬಂದ್ ಮಾಡಲಾಗುವುದು. ಮುಂದಿನ ಮಳೆಗಾಲ ಆರಂಭಕ್ಕೂ ಮುನ್ನ ಅಂದರೆ, ಏಪ್ರಿಲ್ ವೇಳೆಗೆ ಕಾಮಗಾರಿ ಮುಗಿಸಬೇಕೆಂಬ ಷರತ್ತು ವಿಧಿಸಿ, ಗುತ್ತಿಗೆದಾರರಿಗೆ ಕಾರ್ಯಾದೇಶ ನೀಡಲಾಗುವುದು’ ಎಂದು ವಿವರಿಸಿದರು.

ಹಾಸನದಿಂದ ಬಿ.ಸಿ.ರೋಡ್‌ವರೆಗಿನ 140 ಕಿ.ಮೀ., ಹೆಗ್ಗದ್ದೆಯಿಂದ ಅಡ್ಡಹೊಳೆವರೆಗಿನ 26 ಕಿ.ಮೀ. ರಸ್ತೆ ಮಾತ್ರ ಲೋಕೋಪಯೋಗಿ ಇಲಾಖೆ ವ್ಯಾಪ್ತಿಯಲ್ಲಿ ಉಳಿದಿದೆ. ಉಳಿದ ರಸ್ತೆಯನ್ನು ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರ ಅಭಿವೃದ್ಧಿಪಡಿಸುತ್ತಿದೆ.

ಶಿರಾಡಿ ಘಾಟಿಯಲ್ಲಿ ಪದೇ ಪದೇ ರಸ್ತೆ ಹಾಳಾಗುತ್ತಿರುವ ಕಾರಣ ಶಾಶ್ವತ ಪರಿಹಾರಕ್ಕಾಗಿ 26 ಕಿ.ಮೀ.ನಲ್ಲೂ ಕಾಂಕ್ರೀಟ್ ರಸ್ತೆ ನಿರ್ಮಿಸಲು ಇಲಾಖೆ ಈ ಯೋಜನೆ ರೂಪಿಸಿದೆ. ಇದರಲ್ಲಿ 13.62 ಕಿ.ಮೀ. ರಸ್ತೆಗೆ 2015ರಲ್ಲೇ ಕಾಂಕ್ರೀಟ್ ಹಾಕಲಾಗಿದೆ. ಆಗ ಶಿರಾಡಿ ಘಾಟಿಯಲ್ಲಿ ಏಳು ತಿಂಗಳು ವಾಹನ ಸಂಚಾರ ಬಂದ್ ಮಾಡಲಾಗಿತ್ತು. ಈ ಸಂದರ್ಭದಲ್ಲಿ ಏಳು ಪರ್ಯಾಯ ಮಾರ್ಗಗಳಲ್ಲಿ ವಾಹನ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿತ್ತು.

ಕಳೆದ ವರ್ಷ ಗುತ್ತಿಗೆ ರದ್ದಾಗಿತ್ತು

ಕಳೆದ ವರ್ಷ ಇದೇ ಕಾಮಗಾರಿಗೆ ಜಿ.ವಿ.ಆರ್‌. ಇನ್‌ಫ್ರಾ ಪ್ರಾಜೆಕ್ಟ್‌ ಪ್ರೈವೆಟ್‌ ಲಿಮಿಟೆಡ್‌ ಕಂಪೆನಿಗೆ ನೀಡಿದ್ದ ಗುತ್ತಿಗೆಯನ್ನು ಸಕಾಲಕ್ಕೆ ಕಾಮಗಾರಿ ಆರಂಭಿಸದ ಕಾರಣ ರದ್ದುಪಡಿಸಲಾಗಿತ್ತು.

‘ಗುತ್ತಿಗೆದಾರ ನ್ಯಾಯಾಲಯದ ಮೊರೆ ಹೋಗಿದ್ದರಿಂದ ಮರು ಟೆಂಡರ್‌ ಆರಂಭಿಸಲು ವಿಳಂಬವಾಗಿತ್ತು. ನ್ಯಾಯಾಲಯವು ಇಲಾಖೆ ಪರವಾಗಿ ಆದೇಶ ನೀಡಿದ ಬಳಿಕ ಟೆಂಡರ್ ಪ್ರಕ್ರಿಯೆ ಆರಂಭಿಸಲಾಗಿದೆ.

ವಿಳಂಬ ಆಗದಂತೆ ಈ ಬಾರಿ ಎಲ್ಲ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗುವುದು’ ಎಂದು ಅಧಿಕಾರಿಗಳು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT