ಧಾರವಾಡ: ಆರು ತಿಂಗಳಲ್ಲಿ (ಏಪ್ರಿಲ್–ಸೆಪ್ಟೆಂಬರ್) ₹2,085 ಕೋಟಿ ತೆರಿಗೆ ಸಂಗ್ರಹವಾಗಿದೆ. ಇದು ನಿಗದಿಗಿಂತ ಏಳು ಕೋಟಿ ರೂಪಾಯಿ ಹೆಚ್ಚು ಎಂದು ಸಾರಿಗೆ ಆಯುಕ್ತ ಬಿ.ದಯಾನಂದ ಶನಿವಾರ ಇಲ್ಲಿ ತಿಳಿಸಿದರು.
ಸಾರಿಗೆ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು. ರಾಜ್ಯದ ಎಲ್ಲ ಭಾಗಗಳಿಂದಲೂ ಸಾರಿಗೆ ಅಧಿಕಾರಿಗಳು ಈ ಸಭೆಗೆ ಬಂದಿದ್ದರು. ಇದೇ ಮೊದಲ ಬಾರಿಗೆ ಬೆಂಗಳೂರಿನಿಂದ ಹೊರಗಡೆ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಯಿತು ಎಂದು ದಯಾನಂದ ತಿಳಿಸಿದರು.
ಪ್ರಸಕ್ತ ಸಾಲಿಗೆ ₹5,561.62 ಕೋಟಿ ತೆರಿಗೆ ಸಂಗ್ರಹಿಸುವ ಗುರಿ ಇದೆ. ಇದರಲ್ಲಿ ಅರ್ಧದಷ್ಟು ತೆರಿಗೆ ಸಂಗ್ರಹ ಆಗಿದ್ದು, ಉಳಿದ ಅವಧಿಯಲ್ಲಿ ಇನ್ನರ್ಧ ತೆರಿಗೆ ಸಂಗ್ರಹಿಸಲು ಅಗತ್ಯ ಕ್ರಮ ತೆಗೆದುಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಆಯುಕ್ತರು ಸೂಚಿಸಿದರು.
14.24 ಲಕ್ಷ ವಾಹನಗಳ ತಪಾಸಣೆ ನಡೆಸಿ ತೆರಿಗೆ ಹಾಗೂ ದಂಡದ ರೂಪದಲ್ಲಿ ₹71 ಕೋಟಿ ಸಂಗ್ರಹಿಸಲಾಗಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ವಿಭಾಗದಲ್ಲಿ ₹13.97 ಕೋಟಿ ಹೆಚ್ಚು ತೆರಿಗೆ ಸಂಗ್ರಹವಾಗಿದೆ ಎಂಬುದನ್ನು ಅವರು ಸಭೆಗೆ ತಿಳಿಸಿದರು.