ಗೋಣಿಕೊಪ್ಪಲು: ವಿಯೆಟ್ನಾಂನಿಂದ ಆಮದು ಮಾಡಿಕೊಂಡಿರುವ ಕಳಪೆ ಗುಣಮಟ್ಟದ ಕಾಳುಮೆಣಸಿನಿಂದ ಸ್ಥಳೀಯ ಬೆಳೆಗಾರರಿಗೆ ಭಾರಿ ಪ್ರಮಾಣದ ನಷ್ಟ ಉಂಟಾಗಿದೆ. ಹಾಗಾಗಿ ಆಮದು ನಿರ್ಬಂಧಿಸುವಂತೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ರಾಜ್ಯ ಅರಣ್ಯ ಅಭಿವೃದ್ಧಿ ನಿಗಮದ ಉಪಾಧ್ಯಕ್ಷೆ ಮಾಂಗೆರ ಪದ್ಮಿನಿ ಪೊನ್ನಪ್ಪ ಅವರ ನೇತೃತ್ವದಲ್ಲಿ ಜಿಲ್ಲೆಯ ಬೆಳೆಗಾರರ ನಿಯೋಗ ಬೆಂಗಳೂರಿನಲ್ಲಿ ಸಲ್ಲಿಸಿದ ಮನವಿಯನ್ನು ಶನಿವಾರ ಸ್ವೀಕರಿಸಿ ಅವರು ಮಾತನಾಡಿದರು.
ಕರಿಮೆಣಸು ಆಮದು ನಿರ್ಬಂಧಿಸುವ ಮೂಲಕ ದೇಶದಲ್ಲಿ ಅತಿ ಹೆಚ್ಚು ಕರಿಮೆಣಸು ಬೆಳೆಯುವ ರಾಜ್ಯದ ಬೆಳೆಗಾರರ ಹಿತ ಕಾಪಾಡುವಂತೆ ಆಗ್ರಹಿಸಿ, ಕೇಂದ್ರ ವಾಣಿಜ್ಯ ಸಚಿವರಿಗೆ ಕೂಡಲೇ ಪತ್ರ ಬರೆಯಲಾಗುವುದು ಎಂದರು.
ಗೋಣಿಕೊಪ್ಪ ಎಪಿಎಂಸಿಯಲ್ಲಿ ವಿಯೆಟ್ನಾಂ ಕರಿಮೆಣಸು ಆಮದು ಹಾಗೂ ಕಲಬೆರಕೆ ಪ್ರಕರಣದ ಬಗ್ಗೆ ಈಗಾಗಲೇ ಕೃಷಿ ಸಚಿವರು, ಕೃಷಿ ಮಾರಾಟ ಇಲಾಖೆ ವತಿಯಿಂದ ತನಿಖೆ ನಡೆಸಲು ಆದೇಶ ನೀಡಿದ್ದಾರೆ.
ಅಲ್ಲದೆ, ಈ ಪ್ರಕರಣದ ಬಗ್ಗೆ ದಾಖಲಾಗಿರುವ ದೂರಿನ ಹಿನ್ನೆಲೆಯಲ್ಲಿ ಎಸಿಬಿಯಿಂದಲೂ ತನಿಖೆ ನಡೆಯುತ್ತಿದೆ ಎಂದು ಮಾಹಿತಿ ನೀಡಿದರು.
ಕರಿಮೆಣಸು ಮತ್ತು ಅಡಿಕೆಯನ್ನು ಎಪಿಎಂಸಿ ಮಾರುಕಟ್ಟೆ ವ್ಯಾಪ್ತಿಯಿಂದ ಮುಕ್ತಗೊಳಿಸಿದಲ್ಲಿ ಬೆಳೆಗಾರರಿಗೆ ಹೆಚ್ಚಿನ ದರ ದೊರೆಯುತ್ತದೆ ಎಂಬ ಬೇಡಿಕೆ ಬಗ್ಗೆ ಚರ್ಚಿಸಿ ಅಗತ್ಯವಾದರೆ ಸದನದ ಒಪ್ಪಿಗೆ ಪಡೆದು ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು ಎಂದು ತಿಳಿದು ಬಂದಿದೆ.