ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಐ.ಟಿ ಘಟಕಕ್ಕೆ ಮಹೇಶಪ್ಪ: ಕಾಂಗ್ರೆಸ್‌ನಲ್ಲೇ ವಿರೋಧ

Last Updated 9 ಅಕ್ಟೋಬರ್ 2017, 19:30 IST
ಅಕ್ಷರ ಗಾತ್ರ

ಬೆಂಗಳೂರು: ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (ವಿಟಿಯು) ಕುಲಪತಿ ಹುದ್ದೆಯಿಂದ ಅಮಾನತಾಗಿದ್ದ ಎಚ್.ಮಹೇಶಪ್ಪ ಅವರನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಮಾಹಿತಿ ತಂತ್ರಜ್ಞಾನ (ಐ.ಟಿ) ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ನೇಮಿಸಿರುವುದಕ್ಕೆ ‍ಪಕ್ಷದಲ್ಲೇ ವಿರೋಧ ವ್ಯಕ್ತವಾಗಿದೆ.

‘ಮಹೇಶಪ್ಪ ನೇಮಕ ಮಾಡಿದ್ದರಲ್ಲಿ ತಪ್ಪೇನಿದೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಮರ್ಥಿಸಿಕೊಂಡಿದ್ದಾರೆ. ಆದರೆ, ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರಡ್ಡಿ, ಈ ನೇಮಕವನ್ನು ಬಲವಾಗಿ ಆಕ್ಷೇಪಿಸಿದ್ದಾರೆ.

"ಕುಲಪತಿಯಾಗಿದ್ದ ಅವಧಿಯಲ್ಲಿ ಭಾರಿ ಭ್ರಷ್ಟಾಚಾರ ನಡೆಸಿದ್ದರು’ ಎನ್ನಲಾದ ಆರೋಪ ಎಚ್. ಮಹೇಶಪ್ಪ ಅವರ ಮೇಲೆ ಬಂದಿತ್ತು. ಈ ಕುರಿತು ರಾಜ್ಯಪಾಲ ವಜುಭಾಯಿ ವಾಲಾ, ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಕೆ.ಎನ್‌. ಕೇಶವನಾರಾಯಣ ನೇತೃತ್ವದಲ್ಲಿ ಸತ್ಯ ಶೋಧನಾ ಸಮಿತಿ ರಚಿಸಿದ್ದರು. ಸಮಿತಿ ನೀಡಿದ ವರದಿಯಲ್ಲಿ ಮಹೇಶಪ್ಪ ಭ್ರಷ್ಟಾಚಾರ ನಡೆಸಿದ್ದಾರೆ ಎಂದು ಹೇಳಲಾಗಿತ್ತು. ಹೀಗಾಗಿ, ಅವರನ್ನು ಕುಲಪತಿ ಹುದ್ದೆಯಿಂದ  ಅಮಾನತುಗೊಳಿಸಿ ರಾಜ್ಯಪಾಲರು ಆದೇಶ ಹೊರಡಿಸಿದ್ದರು.

ಚುನಾವಣಾ ಪ್ರಚಾರಕ್ಕಾಗಿ ರಚಿಸಲಾಗಿರುವ ಐ.ಟಿ ಘಟಕಕ್ಕೆ ಮಹೇಶಪ್ಪ ಅವರನ್ನು ನೇಮಿಸಲಾಗಿದೆ. ‘ಭ್ರಷ್ಟಾಚಾರ ಆರೋಪ ಹೊತ್ತವರನ್ನು ಕಾಂಗ್ರೆಸ್‌ ನೇಮಕ ಮಾಡಿದ್ದು ಖಂಡನೀಯ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಯಡಿಯೂರಪ್ಪ ಹೇಳಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ, ‘ಜೈಲಿಗೆ ಹೋಗಿ ಬಂದ ಯಡಿಯೂರಪ್ಪ ಅವರೇ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರಾಗಿದ್ದಾರೆ. ಇದು ಅದಕ್ಕಿಂತಲೂ ದೊಡ್ಡ ಅಪರಾಧವೇ. ಯಡಿಯೂರಪ್ಪ ಮಾಡಿದ ತಪ್ಪಿಗಿಂತ ದೊಡ್ಡ ತಪ್ಪು ಅವರು (ಮಹೇಶಪ್ಪ) ಮಾಡಿದ್ದಾರಾ’ ಎಂದು ಪ್ರಶ್ನಿಸಿದರು.

‘ಹಲವು ಹಗರಣಗಳಲ್ಲಿ ಮಹೇಶಪ್ಪ ಹೆಸರಿದೆ. ಕೆಪಿಸಿಸಿಗೆ ಅವರ ನೇಮಕ ಸರಿಯಲ್ಲ. ಈ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ ಹಾಗೂ ಮುಖ್ಯಮಂತ್ರಿಗೆ ಪತ್ರ ಬರೆಯುತ್ತೇನೆ’ ಎಂದು ರಾಯರಡ್ಡಿ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT