ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಮಧ್ಯಂತರ ಪರಿಹಾರ ನೀಡಲು ಅಗತ್ಯ ಕ್ರಮ ವಹಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.
ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಬಿ.ಪಿ. ಮಂಜೇಗೌಡ, ಪ್ರಧಾನ ಕಾರ್ಯದರ್ಶಿ ಮಾಲತೇಶ ಅಣ್ಣಿಗೇರಿ, ಖಜಾಂಚಿ ಯೋಗಾನಂದ, ರಾಷ್ಟ್ರೀಯ ಪಿಂಚಣಿ ಯೋಜನೆ ರಾಜ್ಯ ಘಟಕದ ಅಧ್ಯಕ್ಷ ರಮೇಶ ಸಂಗಾ ಅವರಿದ್ದ ನಿಯೋಗ, ಸಿದ್ದರಾಮಯ್ಯ ಅವರನ್ನು ಸೋಮವಾರ ಭೇಟಿ ಮಾಡಿ ಮನವಿ ಸಲ್ಲಿಸಿತು.
‘ಆರನೇ ವೇತನ ಆಯೋಗದ ಅವಧಿ ವಿಸ್ತರಣೆಯಾಗಿರುವುದರಿಂದ ವೇತನ ಪರಿಷ್ಕರಣೆ ವಿಳಂಬ ಆಗಬಹುದು ಎಂಬ ಆತಂಕ ಇದೆ. ಕೂಡಲೇ ವರದಿ ಸಲ್ಲಿಸುವಂತೆ ಆಯೋಗಕ್ಕೆ ಸೂಚಿಸಬೇಕು. ಆಯೋಗದ ಶಿಫಾರಸು ಜಾರಿ ಮಾಡುವವರೆಗೆ ಶೇ 30ರಷ್ಟು ಮಧ್ಯಂತರ ಪರಿಹಾರ ಘೋಷಿಸಬೇಕು’ ಎಂದು ಮಂಜೇಗೌಡ ಒತ್ತಾಯಿಸಿದರು.
‘ವೇತನ ಪರಿಷ್ಕರಣೆಯ ಉದ್ದೇಶದಿಂದಲೇ ಆಯೋಗ ರಚಿಸಿದ್ದೇನೆ. ವಿಳಂಬ ಮಾಡುವ ಪ್ರಶ್ನೆಯೇ ಇಲ್ಲ. ಈಗಿನ ಸರ್ಕಾರದ ಅವಧಿಯಲ್ಲೇ ಆಯೋಗದ ಶಿಫಾರಸನ್ನು ಜಾರಿ ಮಾಡುವುದು ನೂರಕ್ಕೆ ನೂರರಷ್ಟು ಸತ್ಯ’ ಎಂದು ಸಿದ್ದರಾಮಯ್ಯ ಭರವಸೆ ನೀಡಿದರು.
‘ಮಧ್ಯಂತರ ಪರಿಹಾರ ನೀಡುವ ಬಗ್ಗೆ ಆಯೋಗದ ಅಧ್ಯಕ್ಷ ಶ್ರೀನಿವಾಸಮೂರ್ತಿ ಜತೆ ಸಮಾಲೋಚನೆ ನಡೆಸಿದ ಬಳಿಕ ತೀರ್ಮಾನ ಕೈಗೊಳ್ಳುತ್ತೇನೆ. ನಮ್ಮ ಸರ್ಕಾರ ನೌಕರರ ಪರವಾದ ನಿಲುವನ್ನು ತೆಗೆದುಕೊಂಡಿದೆ. ಇನ್ನು ಮುಂದೆಯೂ ತೆಗೆದುಕೊಳ್ಳಲಿದೆ’ ಎಂದೂ ಅವರು ಹೇಳಿದರು.