ಬೆಂಗಳೂರು: ಐಎಎಸ್ ಅಧಿಕಾರಿ ರಾಜೇಂದ್ರಕುಮಾರ್ ಕಟಾರಿಯಾಗೆ ಬೆದರಿಕೆ ಹಾಕಿದ ಆರೋಪ ಎದುರಿಸುತ್ತಿರುವ ಮಾಯಕೊಂಡ ಕ್ಷೇತ್ರದ ಕಾಂಗ್ರೆಸ್ ಶಾಸಕ ಶಿವಮೂರ್ತಿ ನಾಯ್ಕ್ ವಿರುದ್ಧ ಲೋಕಾಯುಕ್ತದಲ್ಲಿ ಗುರುವಾರ ದೂರು ದಾಖಲಾಗಿದೆ.
ತುಮಕೂರಿನ ಸಿದ್ದಲಿಂಗೇಗೌಡ ಎಂಬುವರು ದೂರು ಸಲ್ಲಿಸಿದ್ದಾರೆ. ‘ತಮ್ಮ ಪುತ್ರ ಸೂರಜ್ ಎಚ್. ನಾಯ್ಕ್ ಅವರಿಗೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ಸಿದ್ದೇಶ್ವರ ಬೆಟ್ಟದಲ್ಲಿ ಗ್ರಾನೈಟ್ ಗಣಿಗಾರಿಕೆ ನಡೆಸಲು ಅನುಮತಿ ನೀಡಲಿಲ್ಲ ಎಂಬ ಕಾರಣಕ್ಕೆ ಶಿವಮೂರ್ತಿ ನಾಯ್ಕ್ ಅವರು ಕಟಾರಿಯಾ ಅವರಿಗೆ ಬೆದರಿಕೆ ಹಾಕಿದ್ದಾರೆ’ ಎಂದು ದೂರಿದ್ದಾರೆ.
‘ಈ ರೀತಿಯ ಒತ್ತಡಗಳಿಗೆ ಸಿಲುಕಿಯೇ ಅಧಿಕಾರಿಗಳು ನಿಯಮಾವಳಿ ಉಲ್ಲಂಘಿಸುತ್ತಿದ್ದು, ಅಕ್ರಮ ಗಣಿಗಾರಿಕೆ ಹೆಚ್ಚಳಕ್ಕೆ ಕಾರಣವಾಗಿದೆ. ಹೀಗಾಗಿ ಶಿವಮೂರ್ತಿ ನಾಯ್ಕ್ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಬೇಕು’ ಎಂದೂ ಅವರು ಮನವಿ ಮಾಡಿದ್ದಾರೆ.