ಬೆಂಗಳೂರು: ವಿಧಾನಪರಿಷತ್ತಿನ ಆರು ಸ್ಥಾನಗಳಿಗೆ ಮುಂದಿನ ವರ್ಷ ನಡೆಯಲಿರುವ ಚುನಾವಣೆಗೆ ಯಾರನ್ನು ಕಣಕ್ಕೆ ಇಳಿಸಬೇಕು ಎಂಬ ಬಗ್ಗೆ ಆಯಾ ಕ್ಷೇತ್ರ ಮಟ್ಟದಲ್ಲಿ ಚರ್ಚೆ ನಡೆಸಿ ವರದಿ ಸಿದ್ಧಪಡಿಸುವಂತೆ ಬಿಜೆಪಿ ರಾಜ್ಯ ಉಸ್ತುವಾರಿ ಪ್ರಕಾಶ್ ಜಾವಡೇಕರ್ ಸೂಚಿಸಿದರು.
ವಿಧಾನಪರಿಷತ್ತಿನ ಸಭಾಪತಿ ಡಿ.ಎಚ್. ಶಂಕರಮೂರ್ತಿ, ಬಿಜೆಪಿ ಸದಸ್ಯರಾದ ರಾಮಚಂದ್ರಗೌಡ, ಗಣೇಶ ಕಾರ್ಣಿಕ್, ಅಮರನಾಥ ಪಾಟೀಲ, ಜೆಡಿಎಸ್ನ ಮರಿತಿಬ್ಬೇಗೌಡ, ರಮೇಶ ಬಾಬು ಅವರ ಅವಧಿ 2018ರ ಜೂನ್ಗೆ ಮುಕ್ತಾಯವಾಗಲಿದೆ.
ಶುಕ್ರವಾರ ನಡೆದ ಪ್ರಮುಖರ ಸಮಿತಿಯಲ್ಲಿ ಈ ಕ್ಷೇತ್ರಗಳ ಅಭ್ಯರ್ಥಿ ಆಯ್ಕೆ ಸಂಬಂಧ ಚರ್ಚೆ ನಡೆಯಿತು. ಕೆಲವು ಕ್ಷೇತ್ರಗಳಲ್ಲಿ ಮೂರಕ್ಕೂ ಹೆಚ್ಚು ಅಭ್ಯರ್ಥಿಗಳಿರುವುದು ಪ್ರಸ್ತಾಪವಾಯಿತು.
‘ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಗಳು ಎರಡಕ್ಕಿಂತ ಹೆಚ್ಚು ಜಿಲ್ಲೆಗಳ ವ್ಯಾಪ್ತಿಯನ್ನು ಹೊಂದಿವೆ. ಆಯಾ ಜಿಲ್ಲಾ ಘಟಕಗಳಿಂದ ಅಭಿಪ್ರಾಯ ಸಂಗ್ರಹಿಸಿ ವರದಿ ಸಿದ್ಧಪಡಿಸಿ. ಅದನ್ನು ಆಧರಿಸಿ ಸೂಕ್ತ ತೀರ್ಮಾನ ಕೈಗೊಳ್ಳೋಣ’ ಎಂದು ಜಾವಡೇಕರ್ ಹೇಳಿದರು.