ಕಲಬುರ್ಗಿ: ‘ರಾಜ್ಯದ 14 ಜಿಲ್ಲೆಗಳಲ್ಲಿ ದೇವದಾಸಿ ಪದ್ಧತಿ ಇನ್ನೂ ಜೀವಂತವಾಗಿದ್ದು, ದೇವದಾಸಿಯರ ಸ್ಥಿತಿಗತಿ ಅಧ್ಯಯನಕ್ಕೆ ತಜ್ಞರ ಸಮಿತಿ ರಚಿಸಲಾಗುವುದು’ ಎಂದು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿಬಾಯಿ ಹೇಳಿದರು.
‘ದೇವದಾಸಿ ಪದ್ಧತಿ ನಿರ್ಮೂಲನೆಗೆ ಶ್ರಮಿಸಿದವರ ಅಧ್ಯಕ್ಷತೆಯಲ್ಲಿ ರಚನೆಯಾಗಲಿರುವ ಈ ಸಮಿತಿಯಲ್ಲಿ ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಇರಲಿದ್ದಾರೆ’ ಎಂದು ಶುಕ್ರವಾರ ಇಲ್ಲಿ ತಿಳಿಸಿದರು.
‘ಹೆಣ್ಣುಮಕ್ಕಳಿಗೆ ಅಷ್ಟೇ ಅಲ್ಲ, ಗಂಡು ಮಕ್ಕಳಿಗೂ ಮುತ್ತು ಕಟ್ಟುವ ಪರಿಪಾಠ ಬೆಳೆದಿದೆ. ಇದು ವೇಶ್ಯಾವಾಟಿಕೆಯ ಇನ್ನೊಂದು ರೂಪ. ಇದು ಮುಂಬಯಿ ಕೆಂಪುದೀಪ ಪ್ರದೇಶಕ್ಕೆ ರಹದಾರಿಯೂ ಆಗಿದೆ’ ಎಂದು ಹೇಳಿದರು.
‘ವರದಿ ಪಡೆದು ಆಯಾ ಜಿಲ್ಲೆಗಳಲ್ಲಿ ದೇವದಾಸಿಯರ ಪುನರ್ವಸತಿ ಕೇಂದ್ರ ಸ್ಥಾಪಿಸುವುದು ಮತ್ತು ಇತರೆ ಸೌಲಭ್ಯ ಕಲ್ಪಿಸಲು ಸರ್ಕಾರದ ಮೇಲೆ ಒತ್ತಡ ತರಲಾಗುವುದು’ ಎಂದರು.