ಅಮೃತಸರ: ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಆಯ್ಕೆ ಮಾಡುವುದರಿಂದ 2019ರ ಲೋಕಸಭೆ ಚುನಾವಣೆಯಲ್ಲಿ ಪಕ್ಷ ಉತ್ತಮ ಸಾಧನೆ ಮಾಡಲಿದೆ ಎಂದು ಪಂಜಾಬ್ ಕಾಂಗ್ರೆಸ್ ನಾಯಕ ನವಜೋತ್ ಸಿಂಗ್ ಸಿಧು ಅವರು ಹೇಳಿದ್ದಾರೆ.
ಅಮೃತಸರ ಸಂಸದ ಗುರ್ಜಿತ್ ಔಜಲಾ ಅವರು ಇಲ್ಲಿನ ಮುಧಲ್ ಗ್ರಾಮವನ್ನು ಸಂಸದರ ಆದರ್ಶ ಗ್ರಾಮ ಯೋಜನೆ ಅಡಿಯಲ್ಲಿ ದತ್ತು ಪಡೆದರು. ಈ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಧು, ರಾಹುಲ್ ಗಾಂಧಿ ಪಕ್ಷದ ಸಾರಥ್ಯ ವಹಿಸಿಕೊಳ್ಳುವುದು ಚುನಾವಣೆಯ ಮೇಲೆ ಪರಿಣಾಮ ಬೀರಲಿದೆ. ಹೀಗಾಗಿ ಮುಂದಿನ ಚುನಾವಣೆಯಲ್ಲಿ ಪಕ್ಷ ಉತ್ತಮ ಸಾಧನೆ ಮಾಡಲು ಸಾಧ್ಯವಾಗುತ್ತದೆ ಎಂದು ಹೇಳಿದ್ದಾರೆ.
ಕೆಲದಿನಗಳ ಹಿಂದೆ ಬಿಜೆಪಿಯ ಪಂಜಾಬ್ ರಾಜ್ಯ ಘಟಕದ ಅಧ್ಯಕ್ಷ ವಿಜಯ್ ಸಂಪ್ಲಾ, ರಾಹುಲ್ ಗಾಂಧಿಗೆ ಪಕ್ಷದ ಅಧ್ಯಕ್ಷ ಸ್ಥಾನ ನೀಡುವ ವಿಚಾರ ಕುರಿತು ವ್ಯಂಗ್ಯವಾಡಿದ್ದರು. ಅವರು, ‘ರಾಹುಲ್ಗೆ ಪಕ್ಷದ ಅಧ್ಯಕ್ಷ ಸ್ಥಾನ ನೀಡಿದರೆ, ಕಾಂಗ್ರೆಸ್ ದೇಶದಿಂದ ಕಾಣೆಯಾಗಲಿದೆ’ ಎಂದು ಲೇವಡಿ ಮಾಡಿದ್ದರು.