ದಾವಣಗೆರೆ: ‘ಬಡ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್ ವಿತರಿಸಿದರೆ ಶಿಕ್ಷಣದ ವ್ಯವಸ್ಥೆ ಸುಧಾರಿಸಲ್ಲ. ಶಿಥಿಲಾವಸ್ಥೆಯಲ್ಲಿರುವ ಸರ್ಕಾರಿ ಶಾಲಾ–ಕಾಲೇಜುಗಳಿಗೆ ಮೂಲಸೌಕರ್ಯ ಒದಗಿಸಿಕೊಡುವ ಮೂಲಕ ಅವುಗಳನ್ನು ಉಳಿಸುವ ಅವಶ್ಯವಿದೆ’ ಎಂದು ಆಡಳಿತ ಪಕ್ಷದ ಶಾಸಕ ಶಾಮನೂರು ಶಿವಶಂಕರಪ್ಪ ರಾಜ್ಯ ಸರ್ಕಾರವನ್ನೇ ಟೀಕಿಸಿದರು.
ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಶನಿವಾರ ಆಯೋಜಿಸಿದ್ದ ಕಾಲೇಜಿನ ಬೆಳ್ಳಿಹಬ್ಬದ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
‘ರಾಜ್ಯದಲ್ಲಿ ಬಹುತೇಕ ಸರ್ಕಾರಿ ಶಾಲೆಗಳಲ್ಲಿ ಕುಡಿಯುವ ನೀರು, ಶೌಚಾಲಯ, ಕೊಠಡಿಗಳ ಕೊರತೆ ಇದೆ. ಕೆಲ ಶಾಲೆಗಳು ಶಿಥಿಲಾವಸ್ಥೆಯಲ್ಲಿಯೂ ಇವೆ. ಅವುಗಳ ದುರಸ್ತಿಗೆ ಸರ್ಕಾರ ಆದ್ಯತೆ ನೀಡಬೇಕು. ಇಲ್ಲವಾದಲ್ಲಿ ಅವುಗಳನ್ನು ಶಾಶ್ವತವಾಗಿ ಮುಚ್ಚುವುದೇ ಒಳ್ಳೆಯದು’ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.