ಸೇಡಂ: ‘ದೀಪಾವಳಿ ಹಬ್ಬ ಹಾಗೂ ಕರ್ನಾಟಕ ರಾಜ್ಯೋತ್ಸವದ ಸಂದರ್ಭಗಳಲ್ಲಿ ವ್ಯಾಪಾರಸ್ಥರು ಕಿರಾಣಿ ಅಂಗಡಿಗಳಲ್ಲಿ ಕಾನೂನುಬಾಹಿರವಾಗಿ ಪಟಾಕಿ ಮತ್ತು ಸ್ಫೋಟಕ ಸಾಮಗ್ರಿಗಳನ್ನು ಮಾರಾಟ ಮಾಡಿದರೆ ಕ್ರಮ ಕೈಗೊಳ್ಳಲಾಗುತ್ತದೆ’ ಎಂದು ತಹಶೀಲ್ದಾರ್ ಸುಬ್ಬಣ್ಣ ಜಮಖಂಡಿ ಎಚ್ಚರಿಸಿದ್ದಾರೆ.
‘ಜಿಲ್ಲಾಧಿಕಾರಿಯಿಂದ ಪರವಾನಗಿ ಪಡೆದು ಮಾರಾಟ ಮಾಡಬೇಕು. ಒಂದು ವೇಳೆ ಪರವಾನಗಿ ಪಡೆಯದೇ ಇದ್ದಲ್ಲಿ, ಸ್ಫೋಟಕ ನಿಯಮ– 2008ರ ನಿಮಯಾನುಸಾರ ಕಾನೂನು ಕ್ರಮ ಜರುಗಿಸಲಾಗುತ್ತದೆ. ಅಲ್ಲದೆ, ಚೀನಾ ಪಟಾಕಿಗಳ ಮಾರಾಟವನ್ನು ನಿಷೇಧಿಸಲಾಗಿದೆ’ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.