ಅಫಜಲಪುರ: ತಾಲ್ಲೂಕಿನ ಅತನೂರ ಗ್ರಾಮ ಜಿಲ್ಲಾ ಪಂಚಾಯಿತಿ ಕೇಂದ್ರ ಸ್ಥಾನವಾಗಿದ್ದು, 10 ಸಾವಿರ ಜನಸಂಖ್ಯೆ ಹೊಂದಿದ್ದರೂ ಇಲ್ಲಿ ಯಾವುದೇ ಮೂಲ ಸೌಲಭ್ಯಗಳಿಲ್ಲದೇ ಜನರು ಪರದಾಡುವಂತಾಗಿದೆ ಎಂದು ಬಿಜೆಪಿ ಯುವ ಮುಖಂಡ ಅಭಿಷೇಕ ಪಾಟೀಲ ಅತನೂರ ಆರೋಪಿಸಿದ್ದಾರೆ.
ಗ್ರಾಮದಲ್ಲಿ ಸಮರ್ಪಕವಾಗಿ ಕುಡಿಯುವ ನೀರಿನ ವ್ಯವಸ್ಥೆ ಇಲ್ಲ. ಹೋಬಳಿ ಕೇಂದ್ರವಾದ ಇಲ್ಲಿ ನೆಮ್ಮದಿ ಕೇಂದ್ರವಿದ್ದು, ಅಲ್ಲಿಗೆ ಹೋಗಿ ಬರಲು ಅಲ್ಲಿಯ ರಸ್ತೆ ಸರಿಯಾಗಿಲ್ಲ. ಗ್ರಾಮದ ಎಲ್ಲಾ ರಸ್ತೆಗಳು ಹಾಳಾಗಿ ಹೋಗಿವೆ. ಮಳೆ ಬಂದರೆ ಸಂಚರಿಸಲು ಸಾಧ್ಯವಿಲ್ಲ ಎಂದು ಅವರು ತಿಳಿಸಿದರು.
ಈ ಕುರಿತು ಗ್ರಾಮ ಪಂಚಾಯಿತಿ ಅನುದಾನದಲ್ಲಿ ಸರಿಯಾದ ರಸ್ತೆಗಳನ್ನು ಮತ್ತು ಚರಂಡಿ ವ್ಯವಸ್ಥೆಯನ್ನು ಕಲ್ಪಿಸಬೇಕೆಂದು ಅವರು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯನ್ನು ಒತ್ತಾಯಿಸಿದ್ದಾರೆ.