ಬೆಂಗಳೂರು: ‘ಬೆಂಗಳೂರು ನಗರ ಅಭಿವೃದ್ಧಿಗೆ ಸಂಬಂಧಿಸಿದ ಪರಿಷ್ಕೃತ ಮಾಸ್ಟರ್ ಪ್ಲಾನ್–2031ಅನ್ನು ಅನುಮೋದಿಸುವ ಮುನ್ನ ರಾಜ್ಯ ಸರ್ಕಾರ ಹೈಕೋರ್ಟ್ ಅನುಮತಿ ಪಡೆಯಬೇಕು’ ಎಂದು ನಿರ್ದೇಶಿಸಲಾಗಿದೆ.
‘ನಮ್ಮ ಬೆಂಗಳೂರು ಪ್ರತಿಷ್ಠಾನ’ ಹಾಗೂ ‘ಸಿಟಿಜನ್ ಆ್ಯಕ್ಷನ್ ಫೋರಂ’ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಹಂಗಾಮಿ ನ್ಯಾಯಮೂರ್ತಿ ಎಚ್.ಜಿ.ರಮೇಶ್ ಹಾಗೂ ದಿನೇಶ್ ಕುಮಾರ್ ಅವರಿದ್ದ ವಿಭಾಗೀಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿ ಈ ಕುರಿತಂತೆ ಆದೇಶಿಸಿದೆ.
‘ಬೆಂಗಳೂರು ನಗರಾಭಿವೃದ್ಧಿ ಪ್ರಾಧಿಕಾರವು (ಬಿಡಿಎ) ಪರಿಷ್ಕೃತ ಮಾಸ್ಟರ್ ಪ್ಲಾನ್ ಅನ್ನು ನಗರಾಭಿವೃದ್ಧಿ ಇಲಾಖೆಗೆ ಕಳುಹಿಸಿದೆ. ಬಿಡಿಎಗೆ ಈ ಮಾಸ್ಟರ್ ಪ್ಲಾನ್ ರೂಪಿಸುವ ಅಧಿಕಾರ ಇಲ್ಲ. ಇದು ಸಂವಿಧಾನಬಾಹಿರ’ ಎಂಬುದು ಅರ್ಜಿದಾರರ ವಾದ.