ಬೆಂಗಳೂರು: ಜ್ವರ ಮತ್ತು ರಕ್ತದೊತ್ತಡ ಏರುಪೇರಿನಿಂದಾಗಿ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಸಾಗರ್ ಅಪೊಲೊ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆದು, ಮನೆಗೆ ಮರಳಿದ್ದಾರೆ.
ಬುಧವಾರ ರಾತ್ರಿ ಅನಾರೋಗ್ಯ ಕಾಣಿಸಿಕೊಂಡಿದ್ದರಿಂದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಡಾ. ಪ್ರಮೋದ್ ನೇತೃತ್ವದ ತಂಡ ಚಿಕಿತ್ಸೆ ನೀಡಿದ್ದು, ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ. ಎರಡು ದಿನ ಸಂಪೂರ್ಣ ವಿಶ್ರಾಂತಿ ಅಗತ್ಯ ಎಂದು ವೈದ್ಯರು ಸೂಚಿಸಿದ್ದಾರೆ.
‘ಯಡಿಯೂರಪ್ಪ ಆಗಾಗ್ಗೆ ವೈದ್ಯರ ಭೇಟಿಗೆ ತೆರಳುತ್ತಾರೆ. ನ. 2ರಿಂದ ನವ ಕರ್ನಾಟಕ ಪರಿವರ್ತನಾ ಯಾತ್ರೆ ಕೈಗೊಳ್ಳಲಿದ್ದಾರೆ. ಇಡೀ ರಾಜ್ಯ ಸುತ್ತಬೇಕಿರುವುದರಿಂದ ಸಂಪೂರ್ಣವಾಗಿ ದೈಹಿಕ ತಪಾಸಣೆ ಮಾಡಿಸಿಕೊಂಡಿದ್ದಾರೆ. ಆರೋಗ್ಯದಲ್ಲಿ ಯಾವುದೇ ಸಮಸ್ಯೆ ಇಲ್ಲ’ ಎಂದು ಅವರ ಆಪ್ತರು ತಿಳಿಸಿದ್ದಾರೆ.