ಕೆಸ್ತೂರು (ದೊಡ್ಡಬಳ್ಳಾಪುರ): ತಾಲ್ಲೂಕಿನ ಕೆಸ್ತೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನಕ್ಕೆ ಗುರುವಾರ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಸರಸ್ವತಮ್ಮ ರಮೇಶ್ ಆಯ್ಕೆಯಾಗಿದ್ದಾರೆ. ಈ ಹಿಂದೆ ಕೆಸ್ತೂರು ಗ್ರಾಮ ಪಂಚಾಯಿತಿಯಲ್ಲಿ ಜೆಡಿಎಸ್ ಬೆಂಬಲಿತ ಅಭ್ಯರ್ಥಿ ಶಿವಶಂಕರ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು.
ಆದರೆ ಈಚೆಗೆ ಶಿವಶಂಕರ್ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದರು. ಇದರಿಂದಾಗಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಪರಿಶಿಷ್ಟ ಜಾತಿ ವರ್ಗಕ್ಕೆ ಮೀಸಲಾಗಿರುವ ಅಧ್ಯಕ್ಷ ಸ್ಥಾನಕ್ಕೆ ಗುರುವಾರ ನಡೆದ ಚುನಾವಣೆಯಲ್ಲಿ ಸರಸ್ವತಮ್ಮ ರಮೇಶ್ 11 ಮತಗಳನ್ನು ಪಡೆದು ಜಯಗಳಿಸಿದ್ದಾರೆ. ಇವರ ವಿರುದ್ಧ ಜೆಡಿಎಸ್ ಬೆಂಬಲಿತ ಅಭ್ಯರ್ಥಿ ಲಕ್ಷ್ಮಮ್ಮ 6 ಮತಗಳನ್ನು ಪಡೆದಿದ್ದಾರೆ.
ವಾಗ್ವಾದ: ಮತದಾನ ಪಕ್ರಿಯೆ ನಡೆಸುವಲ್ಲಿ ಚುನಾವಣಾ ಅಧಿಕಾರಿ ಹನುಮಂತರಾಯಪ್ಪ ಕಾನೂನು ಬದ್ಧವಾಗಿ ನಡೆಸಿಲ್ಲ ಎಂದು ಆರೋಪಿಸಿ ಜೆಡಿಎಸ್, ಬಿಜೆಪಿ ಮುಖಂಡರು ಚುನಾವಣಾ ಅಧಿಕಾರಿ ನಡುವೆ ವಾಗ್ವಾದ ನಡೆಸಿದರು. ಇದರಿಂದಾಗಿ ಕೆಲಸ ಸಮಯ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು.
ಈ ಬಗ್ಗೆ ಮಾಹಿತಿ ನೀಡಿರುವ ಜೆಡಿಎಸ್ ಮುಖಂಡರಾದ ಪುಟ್ಟಬಸವರಾಜು, ಗ್ರಾಮ ಪಂಚಾಯಿತಿಯ 10 ಜನ ಸದಸ್ಯರು ನಾವು ಜೆಡಿಎಸ್ ಬೆಂಬಲಿತ ಅಭ್ಯರ್ಥಿ ಲಕ್ಷ್ಮಮ್ಮ ಅವರಿಗೆ ಮತ ಹಾಕಿರುವುದಾಗಿ ಪತ್ರಗಳನ್ನು ಬರೆದುಕೊಟ್ಟಿದ್ದಾರೆ. ಈ ಪತ್ರವನ್ನು ಚುನಾವಣಾ ಅಧಿಕಾರಿಗಳಿಗೆ ನೀಡಲಾಗಿದೆ. ಈ ಬಗ್ಗೆ ಕಾನೂನು ರೀತಿಯ ಹೋರಾಟವನ್ನು ನಡೆಸಲಾಗುವುದು ಎಂದು ತಿಳಿಸಿದ್ದಾರೆ.
ಪಂಚಾಯಿತ್ ರಾಜ್ ಕಾನೂನಿನ ರೀತಿಯಲ್ಲಿಯೇ ಚುನಾವಣಾ ಪ್ರಕ್ರಿಯೆ ನಡೆಸಲಾಗಿದೆ. ಸದಸ್ಯರು ಗೌಪ್ಯ ಮತದಾನದ ಮೂಲಕ ಮತಚಲಾಯಿಸಿದ್ದಾರೆ. ಈ ಬಗ್ಗೆ ಸದಸ್ಯರು ನೀಡಿರುವ ಆಕ್ಷೇಪಣೆಗಳನ್ನು ಪಡೆದು ಉಪ ವಿಭಾಗಾಧಿಕಾರಿಗಳಿಗೆ ಸಲ್ಲಿಸಿದ್ದೇನೆ ಎಂದು ಚುನಾವಣ ಅಧಿಕಾರಿ ಹನುಮಂತರಾಯಪ್ಪ ತಿಳಿಸಿದ್ದಾರೆ.
ಅಭಿನಂದನೆ: ಕೆಸ್ತೂರು ಗ್ರಾಮ ಪಂಚಾಯಿತಿ ನೂತನ ಅಧ್ಯಕ್ಷೆಯಾಗಿ ಆಯ್ಕೆಯಾಗಿರುವ ಸರಸ್ವತಮ್ಮ ಅವರನ್ನು ಶಾಸಕ ಟಿ.ವೆಂಕಟರಮಣಯ್ಯ,ಕಾಂಗ್ರೆಸ್ ಬ್ಲಾಕ್ ಸಮಿತಿ ಅಧ್ಯಕ್ಷ ಎಂ.ಬೈರೇಗೌಡ, ನಗರ ಬ್ಲಾಕ್ ಅಧ್ಯಕ್ಷ ಕೆ.ಜಿ.ಅಶೋಕ್ ಅಭಿನಂದಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.