ಚಾಮರಾಜನಗರ: ‘ಸುವರ್ಣ ಗ್ರಾಮ ಯೋಜನೆಗೆ ಸೇರ್ಪಡೆಯಾಗಿರುವ ತಾಲ್ಲೂಕಿನ ಮಾದಲವಾಡಿಯ ಅಭಿವೃದ್ಧಿಗೆ ₹ 1 ಕೋಟಿ ಅನುದಾನ ಬಿಡುಗಡೆಯಾಗಿದ್ದು, ಮುಂದಿನ ತಿಂಗಳು ಕಾಮಗಾರಿಗೆ ಚಾಲನೆ ನೀಡಲಾಗುವುದು’ ಎಂದು ಶಾಸಕ ಸಿ. ಪುಟ್ಟರಂಗಶೆಟ್ಟಿ ಹೇಳಿದರು.
ಮಾದಲವಾಡಿ, ಯರಗನಹಳ್ಳಿ, ಅಚ್ಚಟ್ಟಿಪುರ, ಯಣಗುಂಬ ಹಾಗೂ ವಡ್ಡರಹಳ್ಳಿ ಗ್ರಾಮಗಳಲ್ಲಿ ಇತ್ತೀಚೆಗೆ ನಡೆದ ಮನೆಮನೆಗೆ ಕಾಂಗ್ರೆಸ್ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಪಕ್ಷವು ಅಧಿಕಾರದ ಅವಧಿಯಲ್ಲಿ ಮಾಡಿದ ಜನಪರ ಕಾರ್ಯಕ್ರಮಗಳು ಹಾಗೂ ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ 165 ಆಶ್ವಾಸನೆಗಳನ್ನು ನೆರವೇರಿಸಲಾಗಿದೆ. ಇದಕ್ಕೆ ಸಂಬಂಧಿಸಿದಂತೆ ಜನರ ಮನೆಮನೆಗೆ ತೆರಳಿ ಸಾಧನೆಗಳ ಪುಸ್ತಕವನ್ನು ನೀಡಲಾಗುತ್ತಿದೆ ಎಂದರು.
ಮಾದಲವಾಡಿ ಗ್ರಾಮದ ಸರ್ವತೋಮುಖ ಅಭಿವೃದ್ಧಿಗಾಗಿ ಸುವರ್ಣ ಗ್ರಾಮಕ್ಕೆ ಸೇರಿಸಲಾಗಿದೆ. ಸಿಸಿ ರಸ್ತೆ, ಚರಂಡಿ ಒಳಗೊಂಡಂತೆ ಮೂಲ ಸೌಕರ್ಯಗಳನ್ನು ಒದಗಿಸಲು ಅನುದಾನ ಬಳಸಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು.
ಜಿಲ್ಲಾ ಪಂಚಾಯಿತಿ ಸದಸ್ಯೆ ಶಶಿಕಲಾ ಮಾತನಾಡಿ, ಎಲ್ಲ ವರ್ಗದ ಜನರಿಗೂ ಸರ್ಕಾರ ಅಭಿವೃದ್ಧಿ ಕಾರ್ಯಗಳನ್ನು ಮಾಡುತ್ತಿದೆ. ಈಗಾಗಲೇ ಶಿಕ್ಷಣ, ಆರೋಗ್ಯ, ಅನ್ನಭಾಗ್ಯ, ಕೃಷಿ ಭಾಗ್ಯ ಹಾಗೂ ವಿಧವಾ ವೇತನ ಸೇರಿದಂತೆ ಇತರೆ ಸೌಲಭ್ಯ ನೀಡಲಾಗಿದೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಜನಪರ ಕೆಲಸ ಮಾಡಲಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿ ಕಾರ್ಯದರ್ಶಿ ಮಲ್ಲಾಜಮ್ಮ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗುರುಸ್ವಾಮಿ, ನಗರಸಭಾ ಅಧ್ಯಕ್ಷೆ ಶೋಭಾ ಪುಟ್ಟಸ್ವಾಮಿ, ಮುಖಂಡರಾದ ಶಂಭಪ್ಪ, ಶೇಖರಪ್ಪ, ಮಲ್ಲಿಕ್, ರವಿ, ನಾಗರಾಜು, ರಾಜೇಂದ್ರ ಹಾಜರಿದ್ದರು.