ನಂಗಲಿ: ‘ಹೈನುಗಾರಿಕೆಯು ಜಿಲ್ಲೆಯ ಜನರ ಜೀವನಾಡಿಯಾಗಿದ್ದು, ಅವಿಭಜಿತ ಕೋಲಾರ ಜಿಲ್ಲೆಯು ಹಾಲು ಉತ್ಪಾದನೆಯಲ್ಲಿ ರಾಜ್ಯದಲ್ಲೇ ದ್ವಿತೀಯ ಸ್ಥಾನದಲ್ಲಿದೆ’ ಎಂದು ಕೋಚಿಮುಲ್ ನಿರ್ದೇಶಕ ಆರ್.ರಾಜೇಂದ್ರಗೌಡ ಹೇಳಿದರು.
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮತ್ತು ಕೋಚಿಮುಲ್ ಸಹಯೋಗದಲ್ಲಿ ಗ್ರಾಮದಲ್ಲಿ ಇತ್ತೀಚೆಗೆ ಹಮ್ಮಿಕೊಂಡಿದ್ದ ಹೈನುಗಾರಿಕೆ ಕುರಿತ ವಿಚಾರ ಸಂಕಿರಣ ಉದ್ಘಾಟಿಸಿ ಮಾತನಾಡಿದರು.
ಸತತ ಬರದಿಂದ ಜಿಲ್ಲೆಯಲ್ಲಿ ಅಂತರ್ಜಲ ಕುಸಿದಿತ್ತು. ಅಲ್ಲದೇ, ಮೇವಿನ ಸಮಸ್ಯೆಯಿಂದ ಜಾನುವಾರುಗಳನ್ನು ಸಾಕುವುದು ಕಷ್ಟವಾಗಿತ್ತು. ಈ ಸಂದರ್ಭದಲ್ಲಿ ಹೈನುಗಾರಿಕೆ ರೈತರ ಕೈ ಹಿಡಿದಿದೆ ಎಂದರು.
ಬರಪೀಡಿತ ಕೋಲಾರ ಜಿಲ್ಲೆಯಲ್ಲಿ ಕೃಷಿ ನಿರ್ವಹಣೆ ಸುಲಭವಲ್ಲ. ಹೀಗಾಗಿ ರೈತರು ಕೃಷಿಯ ಜತೆ ಉಪ ಕಸುಬಾಗಿ ಹೈನುಗಾರಿಕೆ ನಡೆಸುತ್ತಿದ್ದಾರೆ. ಹೈನುಗಾರಿಕೆಯು ರೈತರ ಆದಾಯದ ಮೂಲವಾಗಿದೆ. ಒಕ್ಕೂಟದಿಂದ ಹೊರ ರಾಜ್ಯಗಳಿಗೆ ಹಾಲು ಕಳುಹಿಸಲಾಗುತ್ತಿದೆ. ದೇಶದ ಗಡಿ ಭಾಗದ ಸಿಯಾಚಿನ್ನಲ್ಲಿರುವ ಯೋಧರಿಗೂ ಹಾಲು ಪೂರೈಸಲಾಗುತ್ತಿದೆ ಎಂದು ತಿಳಿಸಿದರು.
ರೈತರು ಹಾಲಿನ ಗುಣಮಟ್ಟಕ್ಕೆ ಒತ್ತು ನೀಡಬೇಕು. ಜಾನುವಾರುಗಳ ಕೊಟ್ಟಿಗೆಯಲ್ಲಿ ಸ್ವಚ್ಛತೆ ಕಾಪಾಡಬೇಕು. ರಾಸುಗಳಿಗೆ ಪೌಷ್ಟಿಕ ಆಹಾರವನ್ನು ನೀಡಿದರೆ ಹಾಲಿನ ಉತ್ಪಾದನೆ ಹೆಚ್ಚುತ್ತದೆ. ಜತೆಗೆ ರಾಸುಗಳಿಗೆ ಕಾಲಕಾಲಕ್ಕೆ ಲಸಿಕೆ ಹಾಕಿಸಬೇಕು. ಬೇಸಿಗೆಯಲ್ಲಿ ಮೇವಿನ ಸಮಸ್ಯೆ ಎದುರಾಗದಂತೆ ಮೇವು ದಾಸ್ತಾನು ಮಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಜಿಲ್ಲಾ ನಿರ್ದೇಶಕ ಜೆ.ಚಂದ್ರಶೇಖರ್, ಗ್ರಾಮ ಪಂಚಾಯಿತಿ ಸದಸ್ಯೆ ಗುಲಾಬ್ ಜಾನ್, ಪಶು ವೈದ್ಯಾಧಿಕಾರಿ ರಮೇಶ್ ಪಾಲ್ಗೊಂಡಿದ್ದರು.