ಮೈಸೂರು: ಬಿಜೆಪಿ ತೊರೆಯಲು ಮುಂದಾಗಿರುವ ಹಿರಿಯ ಮುಖಂಡ ಸಿ.ಎಚ್.ವಿಜಯಶಂಕರ್ ಅವರ ಮನವೊಲಿಸುವ ಕಸರತ್ತು ಮುಂದುವರಿದಿದೆ.
62ನೇ ವರ್ಷಕ್ಕೆ ಕಾಲಿರಿಸಿದ ಅವರನ್ನು ಶನಿವಾರ ನಗರದ ಮನೆಯಲ್ಲಿ ಭೇಟಿಯಾದ ಸಂಸದ ಪ್ರತಾಪಸಿಂಹ ಹಾಗೂ ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಕೋಟೆ ಎಂ.ಶಿವಣ್ಣ ಶುಭಕೋರಿದರು. ಅಲ್ಲದೆ, ಪಕ್ಷದಲ್ಲೇ ಉಳಿಯುವಂತೆ ಮನವಿ ಮಾಡಿದರು.
‘ಪಿರಿಯಾಪಟ್ಟಣ ಕ್ಷೇತ್ರದ ಟಿಕೆಟ್ ವಿಚಾರದಲ್ಲಿ ಗೊಂದಲಕ್ಕೆ ಒಳಗಾಗಿದ್ದಾರೆ. ಈ ಕ್ಷೇತ್ರದಲ್ಲಿ ಬಿಜೆಪಿ ಗೆಲ್ಲಿಸುವ ಶಕ್ತಿ ಇರುವುದು ವಿಜಯಶಂಕರ್ ಅವರಿಗೆ ಮಾತ್ರ. ಪಕ್ಷ ತೊರೆಯದಂತೆ ಮನವಿ ಮಾಡಿದ್ದೇವೆ’ ಎಂದು ಪ್ರತಾಪಸಿಂಹ ಹೇಳಿದರು.
ಪಿರಿಯಾಪಟ್ಟಣ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸುವ ಇರಾದೆ ಹೊಂದಿರುವ ಅವರು ಕಳೆದ ಎರಡು ವರ್ಷಗಳಿಂದ ಈ ಭಾಗದಲ್ಲಿ ಪಕ್ಷ ಸಂಘಟನೆಯಲ್ಲಿ ತೊಡಗಿದ್ದಾರೆ. ಆದರೆ, ಪಕ್ಷದ ವಿರುದ್ಧ ಪದೇಪದೇ ಅಸಮಾಧಾನ ವ್ಯಕ್ತಪಡಿಸುತ್ತಿರುವುದು ಈ ಗೊಂದಲಕ್ಕೆ ಕಾರಣವಾಗಿದೆ.