ಧಾರವಾಡ: ‘ಜಗತ್ತಿನ ಅದ್ಭುತಗಳಲ್ಲಿ ಒಂದಾಗಿರುವ ಆಗ್ರಾದ ತಾಜ್ಮಹಲ್ ಬಗ್ಗೆ ಯಾರೊಬ್ಬರೂ ಬಾಯಿಗೆ ಬಂದಂತೆ ಮಾತನಾಡುವುದು ಸರಿಯಲ್ಲ’ ಎಂದು ಬೃಹತ್ ಹಾಗೂ ಮಧ್ಯಮ ಕೈಗಾರಿಕೆ ಸಚಿವ ಆರ್.ವಿ. ದೇಶಪಾಂಡೆ ಹೇಳಿದರು.
ಕೃಷಿ ವಿಶ್ವವಿದ್ಯಾಲಯದಲ್ಲಿ ನಡೆಯಲಿರುವ ಬೆಳಗಾವಿ ವಿಭಾಗ ಮಟ್ಟದ ಸೌಲಭ್ಯಗಳ ವಿತರಣಾ ಸಮಾವೇಶ ಹಾಗೂ ಮಾಹಿತಿ ಉತ್ಸವದ ಸಿದ್ಧತೆಯನ್ನು ಶನಿವಾರ ಪರಿಶೀಲಿಸಿದ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.
‘ಟಿಪ್ಪು ಜಯಂತಿಗೆ ಈಗ ವಿರೋಧ ವ್ಯಕ್ತಪಡಿಸುತ್ತಿರುವ ಬಿ.ಎಸ್. ಯಡಿಯೂರಪ್ಪ ಕೆಜೆಪಿಯಲ್ಲಿದ್ದಾಗ ಟಿಪ್ಪುವನ್ನು ತಲೆಯ ಮೇಲೆ ಹೊತ್ತುಕೊಂಡು ತಿರುಗಿದ್ದಾರೆ. ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರಾದ ಬಳಿಕ ಬದಲಾಗಿದ್ದು ಏಕೆ ಎಂದು ಸ್ಪಷ್ಟನೆ ನೀಡಬೇಕು’ ಎಂದರು.
‘ಟಿಪ್ಪು ಜಯಂತಿ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆ ಮೀರಿ ನಡೆದುಕೊಳ್ಳುವರ ವಿರುದ್ಧ ಸರ್ಕಾರ ಕ್ರಮ ಕೈಗೊಳ್ಳಲಿದೆ. ವಿರೋಧ ಪಕ್ಷದವರು ಸಹ ಕಾನೂನು ಮೀರುವುದಿಲ್ಲ ಎಂಬ ವಿಶ್ವಾಸ ನಮಗಿದೆ’ ಎಂದರು.
‘ಚುನಾವಣೆ ಬಂದಾಗ ರಾಜಕೀಯ ಮುಖಂಡರು ಆರೋಪ ಮಾಡುವುದು ಸಹಜ. ಆದರೆ, ಬಿ.ಎಸ್.ಯಡಿಯೂರಪ್ಪ ಇಂದು ಕಲ್ಲಿದ್ದಲು ಗಣಿಗಾರಿಕೆ ಅಕ್ರಮದ ಕುರಿತು ಮಾಡಿರುವ ಆರೋಪದಲ್ಲಿ ಯಾವುದೇ ಹುರುಳಿಲ್ಲ.
ಒಂದು ವೇಳೆ ದಾಖಲೆಗಳಿದ್ದರೆ ಬಿಡುಗಡೆ ಮಾಡಲಿ, ಆರೋಪ ಸಾಬೀತಾದರೆ ಶಿಕ್ಷೆ ಎದುರಿಸಲು ಸಿದ್ಧವಿದ್ದೇನೆ’ ಎಂದರು.
ಜಿಲ್ಲಾ ಉಸ್ತುವಾರಿ ಸಚಿವ ವಿನಯ ಕುಲಕರ್ಣಿ, ಜಿಲ್ಲಾಧಿಕಾರಿ ಡಾ. ಎಸ್.ಬಿ. ಬೊಮ್ಮನಹಳ್ಳಿ, ಸಿಇಓ ಸ್ನೇಹಲ್ ರಾಯಮಾನೆ ಇದ್ದರು.