ಮಂಗಳೂರು: ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ವಿಶ್ವವಿದ್ಯಾಲಯಗಳ ಮೂಲಸೌಕರ್ಯ ಅಭಿವೃದ್ಧಿಗೆ ಒಟ್ಟು ₹5 ಸಾವಿರ ಕೋಟಿ ವಿಶೇಷ ಪ್ಯಾಕೇಜ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಶೀಘ್ರ ಚಾಲನೆ ನೀಡಲಿದ್ದಾರೆ ಎಂದು ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರಡ್ಡಿ ತಿಳಿಸಿದರು.
ಶನಿವಾರ ನಗರದ ರಥಬೀದಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಮರುನಾಮಕರಣ, ಕಟ್ಟಡ ಹಾಗೂ ವಿವಿಧ ಸೌಕರ್ಯಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು.
ರಾಜ್ಯದಲ್ಲಿ ಒಟ್ಟು 412 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಿದ್ದು, ಅವುಗಳಲ್ಲಿ 112 ಕಾಲೇಜುಗಳಿಗೆ ಕೊಠಡಿ ಸೇರಿದಂತೆ ಮೂಲಸೌಕರ್ಯಗಳ ಕೊರತೆ ಇದೆ.
ಇದಕ್ಕಾಗಿ ₹3 ಸಾವಿರ ಕೋಟಿ ಮೊತ್ತದ ಮಾಸ್ಟರ್ ಪ್ಲಾನ್ ರೂಪಿಸಲಾಗಿದೆ. ಇವುಗಳ ಜತೆಗೆ ರಾಜ್ಯದ 25 ಸರ್ಕಾರಿ ವಿಶ್ವವಿದ್ಯಾಲಯಗಳ ಮೂಲಸೌಕರ್ಯದ ಕೊರತೆ ಎದುರಿಸುತ್ತಿದ್ದು, ಇದಕ್ಕೆ ಸುಮಾರು ₹2 ಸಾವಿರ ಕೋಟಿ ಅಗತ್ಯವಿದೆ. ಒಟ್ಟಾರೆ ₹5 ಸಾವಿರ ಕೋಟಿ ಮೊತ್ತದ ಪ್ಯಾಕೇಜ್ ನೀಡಲಾಗುವುದು ಎಂದು ವಿವರಿಸಿದರು.