ನವದೆಹಲಿ: ಶೋಷಣೆ ರಹಿತ ಸಮಾಜ ಮತ್ತು ಪ್ರಬುದ್ಧ ದೇಶ ನಿರ್ಮಾಣದ ಸಂಕಲ್ಪದೊಂದಿಗೆ ಇತ್ತೀಚೆಗೆ ಉದಯವಾಗಿರುವ ಪ್ರಜಾ ಪರಿವರ್ತನ ಪಕ್ಷದ ನೋಂದಣಿಗೆ ಕೇಂದ್ರ ಚುನಾವಣಾ ಆಯೋಗಕ್ಕೆ ಅರ್ಜಿ ಸಲ್ಲಿಸಲಾಗಿದೆ ಎಂದು ಪಕ್ಷದ ಅಧ್ಯಕ್ಷ ಬಿ.ಗೋಪಾಲ ತಿಳಿಸಿದರು.
ಸೋಮವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ವಿಧಾನಸಭೆ ಚುನಾವಣೆಯನ್ನು ಉದ್ದೇಶದಲ್ಲಿ ಇಟ್ಟುಕೊಂಡು ಪಕ್ಷ ಸ್ಥಾಪಿಸಲಾಗಿದೆ. ಎರಡು ತಿಂಗಳಲ್ಲಿ ನೋಂದಣಿ ಪ್ರಕ್ರಿಯೆ ಪೂರ್ಣಗೊಳ್ಳಲಿದೆ ಎಂದು ಹೇಳಿದರು.
ರಾಜ್ಯದ ಬಾಗಲಕೋಟೆ, ವಿಜಯಪುರ, ಕೊಪ್ಪಳ, ರಾಯಚೂರು, ಕಲ್ಬುರ್ಗಿ ಸೇರಿದಂತೆ ವಿವಿಧ ಜಿಲ್ಲೆಗಳ 40 ಕ್ಷೇತ್ರಗಳಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ನಿರ್ಧರಿಸಲಾಗಿದೆ ಎಂದು ಅವರು ವಿವರಿಸಿದರು.
ಮತವನ್ನು ಮಾರಿಕೊಂಡವರು ತಮ್ಮನ್ನು ಪ್ರತಿನಿಧಿಸುವವರಿಂದ ಅಭಿವೃದ್ಧಿಯನ್ನು ನಿರೀಕ್ಷಿಸಲಾಗದು. ಜನರಲ್ಲಿ ಈ ಕುರಿತು ಜಾಗೃತಿ ಮೂಡಿಸುವ ಅಗತ್ಯವಿದೆ. ಮೊದಲು ಮತದಾರರ ಮನಸ್ಸನ್ನು ಪರಿವರ್ತಿಸಬೇಕಿದೆ. ನಂತರವಷ್ಟೇ ಸಾಮಾಜಿಕ ಪರಿವರ್ತನೆ ಸಾಧ್ಯ ಎಂದ ಅವರು, ಕಳೆದ ನಾಲ್ಕು ವರ್ಷಗಳಿಂದ ಪ್ರಜಾ ಪರಿವರ್ತನ ವೇದಿಕೆಯ ಹೆಸರಿನಲ್ಲಿ ರಾಜ್ಯದಾದ್ಯಂತ ಜಾಗೃತಿ ಮೂಡಿಸಲಾಗುತ್ತಿದೆ ಎಂದರು. ಖಜಾಂಚಿ ಸೈಯ್ಯದ್ ರೋಷನ್ ಮುಲ್ಲಾ ಹಾಜರಿದ್ದರು.