ಬೆಂಗಳೂರು: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ಸಿನ ಹಾಲಿ 15 ಶಾಸಕರಿಗೆ ಟಿಕೆಟ್ ಕೈ ತಪ್ಪುವ ಸಾಧ್ಯತೆ ಇದೆ.
ಪಕ್ಷದ ಹೈಕಮಾಂಡ್ಗೆ ಈಗಾಗಲೇ 100 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ರಾಜ್ಯ ಉಸ್ತುವಾರಿ ಕೆ.ಸಿ. ವೇಣುಗೋಪಾಲ್ ಸಲ್ಲಿಸಿದ್ದು, ಈ ಪಟ್ಟಿಯಲ್ಲಿ 15 ಕ್ಷೇತ್ರಗಳ ಶಾಸಕರ ಹೆಸರುಗಳನ್ನು ಕೈ ಬಿಡಲಾಗಿದೆ ಎಂದು ಪಕ್ಷದ ಮೂಲಗಳು ಹೇಳಿವೆ.
‘ಗೆಲ್ಲುವ ಅಭ್ಯರ್ಥಿಗಳಿಗಷ್ಟೆ ಟಿಕೆಟ್ ನೀಡಬೇಕು. ಯಾರದ್ದೋ ಬೆಂಬಲಿಗರು ಎಂಬ ಕಾರಣಕ್ಕೆ ಟಿಕೆಟ್ ನೀಡಬೇಡಿ’ ಎಂದು ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಸಲಹೆ ನೀಡಿದ್ದಾರೆ. ಈ ವಿಷಯವನ್ನು ವೇಣುಗೋಪಾಲ್ ಅವರು ಕೆಪಿಸಿಸಿ ಅಧ್ಯಕ್ಷ ಜಿ. ಪರಮೇಶ್ವರ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗಮನಕ್ಕೆ ತಂದಿದ್ದಾರೆ.
ಕಳೆದ ವಾರ ನಗರದ ಹೋಟೆಲೊಂದರಲ್ಲಿ ತಡರಾತ್ರಿವರೆಗೆ ಸಭೆ ನಡೆಸಿದ ಈ ಮೂವರು ನಾಯಕರು ಮೊದಲ ಪಟ್ಟಿ ಸಿದ್ಧಪಡಿಸಿದ್ದಾರೆ. ಆ ಪಟ್ಟಿಯಲ್ಲಿ, 2013ರ ಚುನಾವಣೆಯಲ್ಲಿ ಪಕ್ಷ ಗೆಲುವು ಕಂಡಿದ್ದ 15 ಕ್ಷೇತ್ರಗಳಿಗೆ ಹೊಸಬರ ಹೆಸರನ್ನು ಸೂಚಿಸಲಾಗಿದೆ ಎಂದು ಗೊತ್ತಾಗಿದೆ.