ಬೆಂಗಳೂರು: ರಾಜ್ಯದಲ್ಲಿರುವ ಎಲ್ಲ ಶಾಲೆಗಳು ಕನ್ನಡವನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯಾಗಿ ಕಲಿಸಬೇಕು ಎಂಬ ರಾಜ್ಯ ಸರ್ಕಾರದ ಆದೇಶದ ವಿರುದ್ಧ ಸಿಬಿಎಸ್ಇ ಶಾಲೆಗಳ ಆಡಳಿತ ಮಂಡಳಿ ಸಂಘ ನ್ಯಾಯಾಲಯದ ಮೊರೆ ಹೋಗುವ ಬಗ್ಗೆ ಚಿಂತನೆ ನಡೆಸಿದೆ.
ಕನ್ನಡವನ್ನು ಒಂದು ಭಾಷೆಯಾಗಿ ಕಲಿಸುವುದರಲ್ಲಿ ಯಾವುದೇ ತೊಂದರೆ ಇಲ್ಲ. ಆದರೆ, ಅದನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯಾಗಿ ಕಡ್ಡಾಯ ಮಾಡಿದರೆ ಸಿಬಿಎಸ್ಇ, ಐಸಿಎಸ್ಇ ಪಠ್ಯಕ್ರಮದ ಶಾಲೆಗಳಿಗೆ ತೊಂದರೆಯಾಗಲಿದೆ ಎಂದು ಶಾಲಾ ಆಡಳಿತ ಮಂಡಳಿಗಳು ಆಕ್ಷೇಪ ವ್ಯಕ್ತಪಡಿಸುತ್ತಿವೆ.
‘ಸಿಬಿಎಸ್ಇ ಶಾಲೆಗಳಲ್ಲಿ ಕನ್ನಡವನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯನ್ನಾಗಿ ಕಡ್ಡಾಯ ಮಾಡಲು ಸಾಧ್ಯವಿಲ್ಲ. ಈ ಸಂಬಂಧ ರಾಜ್ಯ ಸರ್ಕಾರಕ್ಕೆ ಮೊದಲು ಪತ್ರ ಬರೆದು ಚರ್ಚಿಸಲಾಗುವುದು. ಸಮಸ್ಯೆ ಪರಿಹಾರ ಆಗದಿದ್ದರೆ ನ್ಯಾಯಾಲಯದ ಮೊರೆ ಹೋಗುವುದು ಅನಿವಾರ್ಯ’ ಎಂದು ಸಿಬಿಎಸ್ಇ ಶಾಲೆಗಳ ಆಡಳಿತ ಮಂಡಳಿ ಸಂಘದ ಅಧ್ಯಕ್ಷ ಎಂ. ಶ್ರೀನಿವಾಸನ್ ‘ಪ್ರಜಾವಾಣಿ’ಗೆ ತಿಳಿಸಿದರು.
‘9 ಮತ್ತು 10ನೇ ತರಗತಿಗೆ ಬೋರ್ಡ್ ಪರೀಕ್ಷೆಗಳು ನಡೆಯುತ್ತವೆ. ಪ್ರಥಮ ಅಥವಾ ದ್ವಿತೀಯ ಭಾಷೆಯಾಗಿ ಕನ್ನಡವನ್ನು ಕಲಿಸಿದರೆ ಬೋರ್ಡ್ ಪರೀಕ್ಷೆ ನಡೆಸಲು ಅವಕಾಶ ಇಲ್ಲ. ಈ ಸಂಬಂಧ ಕೇಂದ್ರ ಪ್ರೌಢ ಶಿಕ್ಷಣ ಮಂಡಳಿಗೂ ಪತ್ರ ಬರೆಯಲಾಗುವುದು’ ಎಂದೂ ಅವರು ಹೇಳಿದರು.