ಮಂಡ್ಯ: ಏಳು ತಿಂಗಳ ನಂತರ ಸೋಮವಾರ ಕ್ಷೇತ್ರಕ್ಕೆ ಬಂದ ಶಾಸಕ ಅಂಬರೀಷ್ ಅವರನ್ನು ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಬಹಳ ವೈಭವದಿಂದ ಸ್ವಾಗತಿಸಿದರು
ಮನೆಮನೆಗೆ ಕಾಂಗ್ರೆಸ್ ಅಭಿಯಾನದ ಅಂಗವಾಗಿ ಕ್ಷೇತ್ರಕ್ಕೆ ಬಂದ ಅಂಬರೀಷ್ ಅವರನ್ನು ಸ್ವಾಗತಿಸಲು ಅಭಿಮಾನಿಗಳು ನಗರದ ವಿವಿಧೆಡೆ ಕಟೌಟ್, ಫ್ಲೆಕ್ಸ್ ಅಳವಡಿಸಿದ್ದರು. ಮರೀಗೌಡ ಬಡಾವಣೆಯಲ್ಲಿ ನಡೆದ ಕಾಂಗ್ರೆಸ್ ಅಭಿಯಾನಕ್ಕೆ ಅವರು ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು ‘ಕಳೆದ ಆರೇಳು ತಿಂಗಳಿಂದ ಅನಾರೋಗ್ಯದ ಸಮಸ್ಯೆ ಇದ್ದ ಕಾರಣ ಕ್ಷೇತ್ರಕ್ಕೆ ಬರಲು ಸಾಧ್ಯವಾಗಿಲ್ಲ. ಹಾಗಾಗಿ ಇದಕ್ಕೆ ಬೇರೆ ಅರ್ಥ ಕಲ್ಪಿಸುವುದು ಬೇಡ. ಈ ಬಾರಿಯೂ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಜನರು ಆಶೀರ್ವದಿಸಬೇಕು. ಮನೆಮನೆಗೆ ಕಾಂಗ್ರೆಸ್ ಅಭಿಯಾನದ ಮೂಲಕ ರಾಜ್ಯ ಸರ್ಕಾರದ ಜನಪರ ಯೋಜನೆಗಳ ಬಗ್ಗೆ ತಿಳಿಸುವ ಕಾರ್ಯ ಪ್ರಾರಂಭವಾಗಿದ್ದು, ಅದು ಯಶಸ್ವಿಗೊಳಿಸಲು ಕಾರ್ಯಕರ್ತರು ಸಮರ್ಪಕವಾಗಿ ಕೆಲಸ ಮಾಡಬೇಕು’ಎಂದು ಹೇಳಿದರು.
‘ಕಾಂಗ್ರೆಸ್ ಸರ್ಕಾರ ಎಲ್ಲಾ ವರ್ಗದ ಜನರಿಗೆ ಹಲವು ಜನಪರ ಯೋಜನೆಗಳನ್ನು ಜಾರಿಗೊಳಿಸಿದೆ. ಸರ್ಕಾರ ಮಾಡಿದ ಎಲ್ಲಾ ಸಾಧನೆಗಳನ್ನು ಕಾರ್ಯಕರ್ತರು ಮನೆಮೆನೆಗೆ ತೆರಳಿ ಪ್ರಚಾರ ಮಾಡುತ್ತಿದ್ದಾರೆ’ ಎಂದು ಹೇಳಿದರು.