ಬೆಂಗಳೂರು: ವಿಕ್ಟೋರಿಯಾ ಆಸ್ಪತ್ರೆಯ ಆವರಣದಲ್ಲಿರುವ ಟ್ರಾಮಾ ಕೇರ್ ಸೆಂಟರ್ನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಛಾಪಾ ಕಾಗದ ಹಗರಣದ ಪ್ರಮುಖ ಅಪರಾಧಿ ಅಬ್ದುಲ್ ಕರೀಂ ಲಾಲ್ ತೆಲಗಿ (66) ಆರೋಗ್ಯವು ಮತ್ತಷ್ಟು ಚಿಂತಾಜನಕವಾಗಿದೆ.
ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ತೆಲಗಿ ಅ.16ರಂದು ಆಸ್ಪತ್ರೆಗೆ ದಾಖಲಾಗಿದ್ದಾನೆ. ಆತನನ್ನು ತೀವ್ರ ನಿಗಾ ಘಟಕದಲ್ಲಿ (ಐಸಿಯು) ಇರಿಸಿ ಚಿಕಿತ್ಸೆ ನೀಡಲಾಗುತ್ತಿದೆ.
‘ತೆಲಗಿ ಸ್ಥಿತಿ ಗಂಭೀರವಾಗಿದ್ದು, ನಿರಂತರವಾಗಿ ಚಿಕಿತ್ಸೆ ನೀಡುತ್ತಿದ್ದೇವೆ. ಆತ ವೆಂಟಿಲೇಟರ್ ಮೂಲಕ ಉಸಿರಾಡುತ್ತಿದ್ದು, ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿಲ್ಲ’ ಎಂದು ಆಸ್ಪತ್ರೆಯ ವೈದರು ಮಂಗಳವಾರ ಬೆಳಿಗ್ಗೆ ಬಿಡುಗಡೆ ಮಾಡಿದ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
‘ತೆಲಗಿ ಸತ್ತಿದ್ದಾರೆ ಎಂಬ ವದಂತಿ ಹಬ್ಬಿತ್ತು. ಆತನ ಆರೋಗ್ಯದ ಬಗ್ಗೆ ಮಾಹಿತಿ ಪಡೆಯಲು 46 ಮಂದಿ ನನಗೆ ಕರೆ ಮಾಡಿದ್ದರು. ಹೀಗಾಗಿ, ಆತನ ಆರೋಗ್ಯದ ಬಗ್ಗೆ ಪತ್ರಿಕಾ ಪ್ರಕಟಣೆಯನ್ನು ರಾತ್ರಿಯೇ ಸಿದ್ಧಪಡಿಸಿದ್ದೆ’ ಎಂದು ಟ್ರಾಮಾ ಕೇರ್ ಸೆಂಟರ್ನ ವಿಶೇಷ ಅಧಿಕಾರಿ ಬಾಲಾಜಿ ಪೈ ‘ಪ್ರಜಾವಾಣಿ’ಗೆ ತಿಳಿಸಿದರು.